
ದೇವದುರ್ಗ: ಅರಕೇರ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ಪಿಎಂ ಶ್ರೀ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ತಸ್ಲಿಂ ಉನ್ನಿಸಾ ಬೇಗಂ ಅವರು ಶಾಲಾ ಶಿಕ್ಷಣ ಇಲಾಖೆಯ ನಿಯಮ ಉಲ್ಲಂಘಿಸಿ, ಶಾಲೆಯಲ್ಲಿಯೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಶಾಲಾ ಆವರಣದಲ್ಲಿ ಹುಟ್ಟುಹಬ್ಬದ ಆಚರಣೆ, ಕೇಕ್ ಕತ್ತರಿಸುವುದು, ಸಿಹಿ ಹಂಚುವುದನ್ನು ನಿಷೇಧಿಸಿ ಶಾಲಾ ಶಿಕ್ಷಣ ಇಲಾಖೆ ಈ ಹಿಂದೆ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಸೇರಿಸಿ ಕೇಕ್ ಕತ್ತರಿಸಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
‘ಮುಖ್ಯಶಿಕ್ಷಕಿ, ಇತರ ಸಿಬ್ಬಂದಿಗೆ ಮಾದರಿಯಾಗಿರಬೇಕು. ನಿಷೇಧವಿದ್ದರೂ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವುದು ಅನಾಥ ಮತ್ತು ಬಡ ಮಕ್ಕಳ ಕಲಿಕೆ ಮೇಲೆ ಪರಿಣಾಮ ಬೀರುತ್ತದೆ. ಇಲಾಖೆ ಅವರನ್ನು ಅಮಾನತು ಮಾಡಿ ಈ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಿ’ ಎಂದು ಶಿಕ್ಷಣ ಪ್ರೇಮಿ ಹನುಮಂತ್ರಾಯ ಒತ್ತಾಯಿಸಿದರು.
‘ಸರ್ಕಾರಿ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆಯನ್ನು ಇಲಾಖೆ ನಿಷೇಧಿಸಿದೆ. ಮುಖ್ಯಶಿಕ್ಷಕಿ ನಿಯಮ ತಿಳಿದವರು. ನಿಯಮ ಉಲ್ಲಂಘಿಸಿರುವುದು ಸರಿಯಲ್ಲ. ಮಾಹಿತಿ ಪಡೆದು ಕ್ರಮ ಕೈಗೊಳ್ಳುತ್ತೇನೆ’ ಎಂದು ಬಿಇಒ ಮಲ್ಲಿಕಾರ್ಜುನ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.