
ಮಾನ್ವಿ: ‘ಇಂದಿನ ದಿನಗಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಬಳಕೆ ಇಲ್ಲದೆ ಅಭಿವೃದ್ಧಿ ಅಸಾಧ್ಯ. ಕಾರಣ ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯದಲ್ಲಿ ಪರಿಣತಿ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವುದು ಅಗತ್ಯ’ ಎಂದು ಸಣ್ಣ ನೀರಾವರಿ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅಭಿಪ್ರಾಯಪಟ್ಟರು.
ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯ ಅವರಣದಲ್ಲಿ ನೇತಾಜಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ನೇತಾಜಿ ವಿಜ್ಞಾನ ವೈಭವ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ನೇತಾಜಿ ವಿಜ್ಞಾನ ಪಿಯು ಕಾಲೇಜು ಉದ್ಘಾಟಿಸಿ ಅವರು ಮಾತನಾಡಿದರು.
‘ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ಬೆಂಗಳೂರಿನ ಹೆಬ್ಬಾಳದ ಹತ್ತಿರ ವಿಜ್ಞಾನ ಆಕಾಡೆಮಿ ಸ್ಥಾಪನೆ ಮಾಡಲಾಗಿದೆ. ರಾಯಚೂರಿನ ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ₹20 ಕೋಟಿ, ತಾರಾಲಯ ನಿರ್ಮಾಣಕ್ಕೆ ₹10 ಕೋಟಿ ಅನುದಾನ ನೀಡಲಾಗಿದೆ’ ಎಂದರು.
‘ರಾಜ್ಯದ 830 ಸರ್ಕಾರಿ ಶಾಲೆಗಳಿಗೆ ಟೆಲಿಸ್ಕೋಪ್ಗಳನ್ನು ನೀಡಲಾಗಿದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿನ ಶಾಲಾ ಮಕ್ಕಳಿಗೆ ಸಂಚಾರಿ ವಿಜ್ಞಾನ ವಸ್ತು ಪ್ರದರ್ಶನ ವಾಹನಗಳ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದರು.
ಶಾಸಕ ಜಿ.ಹಂಪಯ್ಯ ನಾಯಕ ಮಾತನಾಡಿದರು.
ನೇತಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಈ.ನರಸಿಂಹ ಅಧ್ಯಕ್ಷತೆ ವಹಿಸಿದ್ದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಕೆ.ಅಮರೇಶಪ್ಪ, ಡಿಡಿಪಿಯು ಸೋಮಶೇಖರಪ್ಪ ಹೊಕ್ರಾಣಿ, ಬಿಇಒ ಚಂದ್ರಶೇಖರ ದೊಡ್ಡಮನಿ, ಮುಖಂಡರಾದ ಎ.ಬಾಲಸ್ವಾಮಿ ಕೊಡ್ಲಿ, ಜಿ.ನಾಗರಾಜ, ತಿಪ್ಪಣ್ಣ ಬಾಗಲವಾಡ, ಸುರೇಶ ಕುರ್ಡಿ, ಸಂಗಮೇಶ ಮುಧೋಳ, ಆಂಜನೇಯ ನಾಯಕ ನಸಲಾಪುರ ಹಾಗೂ ಕೆ.ವಿಜಯಲಕ್ಷ್ಮಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.