ಜಾಲಹಳ್ಳಿ: ಕೃಷಿ ಇಲಾಖೆಯಿಂದ ಅಧಿಕೃತವಾಗಿ ಪರವಾನಗಿ ಪಡೆದ ಮಾರಾಟಗಾರರಿಂದ ಮಾತ್ರ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಸೇರಿದಂತೆ ಇತರೆ ಕೃಷಿ ವಸ್ತುಗಳನ್ನು ಖರೀದಿಸಬೇಕು ಎಂದು ರೈತರಿಗೆ ಪಟ್ಟಣದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಆಂಜನೇಯ ರಾಠೋಡ್ ಹೇಳಿದರು.
ಗುರುವಾರ ಪಟ್ಟಣದ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಸ್ಥಳೀಯ ಕೃಷಿ ಪರಿಕರ ಮತ್ತು ಬೀಜ, ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ದಾಸ್ತಾನು ಮತ್ತು ಇತರೆ ಮಾಹಿತಿ ಪರಿಶೀಲಿಸಿದ ನಂತರ ಅವರು ಮಾತನಾಡಿದರು.
ರೈತರು ತಾವು ಖರೀದಿಸಿದ ಬಿತ್ತನೆ ಬೀಜ, ರಸ ಗೊಬ್ಬರ ಇತರೆ ಕೃಷಿ ವಸ್ತುಗಳ ಖರೀದಿಸಿ ಅಂಗಡಿಗಳಿಂದ ರಶೀದಿಯನ್ನು ಕಡ್ಡಾಯವಾಗಿ ಪಡೆಯಬೇಕು. ರಸಗೊಬ್ಬರ ಮಾರಾಟಗಾರರು ರಶೀದಿ ಕೊಡದಿದ್ದರೆ ಕೂಡಲೇ ರೈತ ಸಂಪರ್ಕ ಕೇಂದ್ರಕ್ಕೆ ದೂರು ನೀಡಬೇಕು ಎಂದು ತಿಳಿಸಿದರು.
ಎಂಆರ್ಪಿ ದರದಲ್ಲಿಯೇ ರಸಗೊಬ್ಬರಗಳನ್ನು ಮಾರಾಟ ಮಾಡಬೇಕು. ಒಂದು ವೇಳೆ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದು ಕಂಡುಬಂದರೆ ಅಂತಹ ಅಂಗಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಜತೆಗೆ ಇಲಾಖೆಯಿಂದ ಅಂಗಡಿಯ ಪರವಾನಗಿ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಾದ ಸಂತೋಷ, ಪ್ರದೀಪ್, ಅಲ್ಲಿಸಾಬ್ ಗಣೇಕಲ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.