ರಾಯಚೂರು:ಹಾವೇರಿ ಜಿಲ್ಲೆಯ ನರಸಾಪುರದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಶರಣಸಂಸ್ಕೃತಿ ಉತ್ಸವವು ಜನವರಿ 14 ಮತ್ತು 15 ರಂದು ನಡೆಯಲಿದೆ ಎಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಪೀಠದ ಗೌರವಾಧ್ಯಕ್ಷ ಬಸವರಾಜ ಸಪ್ಪನಗೋಳ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ರಂದು ಶರಣ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸುವರು. 15 ರಂದು ನಡೆಯುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಟಿಸಲಿದ್ದಾರೆ. ಶಾಸಕ ಬಿ. ನಾರಾಯಣರಾವ್ ಅಧ್ಯಕ್ಷತೆ ವಹಿಸುವರು. ಹರಗುರು ಚರಮೂರ್ತಿಗಳು, ಮಾಜಿ ಹಾಗೂ ಹಾಲಿ ಶಾಸಕರು, ಸಮಾಜದ ಗಣ್ಯರು ಭಾಗವಹಿಸುವರು ಎಂದರು.
ಇದೇ ವೇಳೆ, ಶಾಂತಿಮುನಿ ಮಹಾಸ್ವಾಮಿಗಳ ತೃತೀಯ ಪುಣ್ಯಸ್ಮರಣೋತ್ಸವ ಹಾಗೂ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳ ದ್ವಿತೀಯ ಪೀಠಾರೋಹಣ ಕಾರ್ಯಕ್ರಮ ನಡೆಸಲಾಗುವುದು. 15 ರಂದು ಇದೇ ಮೊದಲ ಸಲ ಮಹಾರಥೋತ್ಸವ ನೆರವೇರಿಸಲಾಗುವುದು ಎಂದು ತಿಳಿಸಿದರು.
23 ಪರ್ಯಾಯ ಪದಗಳಿಂದ ಗುರುತಿಸುವ ಗಂಗಾಮತಸ್ಥ ಸಮಾಜವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರ್ಪಡೆ ಮಾಡಬೇಕು ಎನ್ನುವ ಬೇಡಿಕೆಗೆ ಯಾವುದೇ ರಾಜಕೀಯ ಪಕ್ಷಗಳು ಸ್ಪಂದಿಸಿಲ್ಲ. ಈಗಲಾದರೂ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಸಮಾಜದ ಬಾಂಧವರು ಪಾಲ್ಗೊಳ್ಳುವರು ಎಂದರು.
ಗಂಗಾಮತಸ್ಥ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಶರಣಪ್ಪ ಕಡಗೋಳ, ಶರಣಪ್ಪ ಪೂಜಾರಿ, ನರಸಪ್ಪ, ಪ್ರಭು, ರಂಗನಾಥ, ನಾರಾಯಣ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.