
ಮಸ್ಕಿ: ಶಿವಕುಮಾರ ಸ್ವಾಮೀಜಿಯವರ 7ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬುಧವಾರ ಭಾವಚಿತ್ರದ ಮೆರವಣಿಗೆ ನಡೆಯಿತು.
ಸಂಜೆ 5ಕ್ಕೆ ದೈವದಕಟ್ಟೆ ಮೇಲೆ ಶಿವಕುಮಾರ ಸ್ವಾಮೀಜಿಯ ಭಾವಚಿತ್ರಕ್ಕೆ ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ, ಕನಕಗಿರಿ, ಮೆದಿಕಿನಾಳದ ಸುವರ್ಣಗಿರಿ ಸಂಸ್ಥಾನ ಮಠದ ಚೆನ್ನಮಲ್ಲ ಸ್ವಾಮೀಜಿ, ಇರಕಲ್ ಮಠದ ಬಸವಪ್ರಸಾದ ಶರಣರು ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು.
ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅದ್ಯಕ್ಷ ಆರ್.ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಪುರಸಭೆ ಅಧ್ಯಕ್ಷ ಸುರೇಶ ಹರಸೂರು, ತಹಶೀಲ್ದಾರ್ ಮಂಜುನಾಥ ಬೋಗಾವತಿ, ಮುಖಂಡ ಮಹಾದೇವಪ್ಪ ಗೌಡ ಪೊಲೀಸ್ ಪಾಟೀಲ, ಸಿಪಿಐ ರಾಮಪ್ಪ ವೈ.ಜಲಗೇರಿ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು.
ವಿಶೇಷವಾಗಿ ಅಲಂಕರಿಸಲಾಗಿದ್ದ ವಾಹನದಲ್ಲಿ ಸಿದ್ಧಗಂಗಾ ಶ್ರೀಗಳ ಭಾವಚಿತ್ರ ಇಟ್ಟು ಮೆರವಣಿಗೆ ಮಾಡಲಾಯಿತು. ಅಗಸಿ, ಅಶೋಕ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಕನಕ ವೃತ್ತ, ತೇರು ಬೀದಿ ಮೂಲಕ ಸಾಗಿ ದೈವದ ಕಟ್ಟೆ ತಲುಪಿತು.
ಡೊಳ್ಳು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು. ಮುಖಂಡರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ವೀರೇಶ ಪಾಟೀಲ ಸ್ವಾಗತಿಸಿ, ನಿರೂಪಿಸಿದರು
ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ನಿಮಿತ್ತ ದೈವದಕಟ್ಟೆ ಮುಂಭಾಗದ ರಸ್ತೆಯಲ್ಲಿ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ಸುಮಾರು 5 ಸಾವಿರಕ್ಕೂ ಹೆಚ್ಚು ಜನ ದಾಸೋಹ ಸ್ವೀಕರಿಸಿದರು. ಬೂಂದಿ, ರೊಟ್ಟಿ, ಪಲ್ಲೆ, ಅನ್ನ–ಸಾರು, ಬಜ್ಜಿ ಸೇರಿದಂತೆ ವಿವಿಧ ಬಗೆಯ ಪ್ರಸಾದದ ವ್ಯವಸ್ಥೆಯನ್ನು ದೈವದಕಟ್ಟೆ ಬಳಗದ ಗೆಳೆಯರು ಭಕ್ತರ ಸಹಕಾರದಿಂದ ಮಾಡಿಸಿದ್ದು ವಿಶೇಷವಾಗಿತ್ತು.
ಮಸ್ಕಿ ಪಟ್ಟಣದ ಪ್ರಮುಖ ಸ್ಥಳವಾದ ದೈವದಕಟ್ಟೆ ಅಭಿವೃದ್ಧಿಪಡಿಸಲು ಅನುದಾನ ನೀಡಲಾಗಿದೆ ಎಂದು ಶಾಸಕ ಆರ್.ಬಸನಗೌಡ ತಿಳಿಸಿದರು. ಕ್ಯಾಷುಟೆಕ್ ಸಂಸ್ಥೆಗೆ ನಿರ್ಮಾಣದ ಹೊಣೆ ವಹಿಸಲಾಗಿದ್ದು ಶೀಘ್ರ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.