ADVERTISEMENT

ರಾಯಚೂರು ವಿವಿಗೆ ₹ 600 ಕೋಟಿ ಬೇಡಿಕೆ: ಕುಲಪತಿ ಪ್ರೊ.ಹರೀಶ್ ರಾಮಸ್ವಾಮಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 8:03 IST
Last Updated 25 ಫೆಬ್ರುವರಿ 2021, 8:03 IST
ಕುಲಪತಿ ಪ್ರೊ.ಹರೀಶ್ ರಾಮಸ್ವಾಮಿ
ಕುಲಪತಿ ಪ್ರೊ.ಹರೀಶ್ ರಾಮಸ್ವಾಮಿ   

ರಾಯಚೂರು: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಯಚೂರು ವಿಶ್ವವಿದ್ಯಾಲಯ ಸಮಗ್ರ ಕ್ಯಾಂಪಸ್ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದಿಂದ ₹600 ಕೋಟಿ ಅನುದಾನ ಕೋರಿ ಬೇಡಿಕೆ ಸಲ್ಲಿಸಲಾಗಿದೆ ಎಂದು ಕುಲಪತಿ ಪ್ರೊ.ಹರೀಶ್ ರಾಮಸ್ವಾಮಿ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಯಾಂಪಸ್ ನಿರ್ಮಾಣದ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ, ಸಮುದಾಯದಿಂದ ಹಾಗೂ ಜನಪ್ರತಿನಿಧಿಗಳಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ. ಕುಲಪತಿಯಾಗಿ ನೇಮಕವಾದ 100 ದಿನಗಳಲ್ಲಿ ಯಾವ ಕೆಲಸಗಳಾಗಿವೆ ಎಂಬುದನ್ನು ಹಂಚಿಕೊಳ್ಳುವ ಉದ್ದೇಶವಿದೆ. ಎಲ್ಲರಿಂದಲೂ ಸಲಹೆ ಪಡೆದು ಮಾದರಿ ಕ್ಯಾಂಪಸ್ ನಿರ್ಮಿಸಲಾಗುವುದು ಎಂದರು.
ಈ ವರ್ಷ ಕೋವಿಡ್ ಇರುವುದರಿಂದ ರಾಜ್ಯ ಸರ್ಕಾರದಿಂದ ಕನಿಷ್ಠ ₹100 ಕೋಟಿ ಅನುದಾನ ಸಿಗುವ ನಿರೀಕ್ಷೆ ಇದೆ. ಅದರಲ್ಲಿ ಆಡಳಿತ ಭವನ, ಪಾಠದ ಕೋಣೆಗಳು, ವಸತಿಗಳು, ತಾತ್ಕಾಲಿಕ ನೇಮಕಾತಿಗಳನ್ನು ಮಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು.

ಇದಲ್ಲದೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ), ಆರ್ ಟಿಪಿಎಸ್ ನಿಂದಲೂ ಸಹಕಾರ ಕೋರಲಾಗಿದೆ. ಬಯೋ ಮೆಡಿಕಲ್ ರಿಸರ್ಚ್ ಸೆಂಟರ್ ಸ್ಥಾಪಿಸಲು ₹57 ಕೋಟಿ ಅನುದಾನವನ್ನು ಕೆಕೆಆರ್ ಡಿಬಿಯಿಂದ ಕೇಳಲಾಗಿದೆ ಎಂದು ತಿಳಿಸಿದರು.

ADVERTISEMENT

ಗುಲಬರ್ಗಾ ವಿಶ್ವವಿದ್ಯಾಲಯದಿಂದ ಅಗತ್ಯ ಸಹಕಾರ ಸಿಗುತ್ತಿದ್ದು, ಈಗಾಗಲೇ ಪ್ರತ್ಯೇಕ ಹಣಕಾಸು ಖಾತೆ ನಿರ್ವಹಣೆ ಆರಂಭಿಸುವುದಕ್ಕೆ ಒಪ್ಪಿಗೆ ನೀಡಿದೆ. ಈ ಮೊದಲು ರಾಜ್ಯ ಸರ್ಕಾರವು ರಾಯಚೂರು ವಿಶ್ವವಿದ್ಯಾಲಯಕ್ಕಾಗಿ ನೀಡಿದ್ದ ₹2.24 ಕೋಟಿ ಅನುದಾನವನ್ನು ಗುಲಬರ್ಗಾ ವಿಶ್ವವಿದ್ಯಾಲಯದವರು ಕೊಡುತ್ತಿದ್ದಾರೆ. ಮಾರ್ಚ್ ಅಂತ್ಯದೊಳಗೆ ಪ್ರತ್ಯೇಕವಾಗುವ ಪ್ರಕ್ರಿಯೆಗಳೆಲ್ಲ ಮುಗಿಯಲಿವೆ ಎಂದು ಹೇಳಿದರು.

ಮುಂದಿನ‌ ಶೈಕ್ಷಣಿಕ ‌ವರ್ಷದಿಂದ ರಾಯಚೂರು ವಿಶ್ವವಿದ್ಯಾಲಯದಿಂದ 25 ಕೋರ್ಸ್ ಗಳನ್ನು ಆರಂಭಿಸಲಾಗುವುದು. ಪ್ರತಿ‌ ವಿಭಾಗಕ್ಕೂ ಒಬ್ಬರು ಪ್ರೊಫೆಸರ್, ಇಬ್ಬರು ರಿಡರ್ಸ್ ನೇಮಕದ ಅಗತ್ಯವಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.