ರಾಯಚೂರು: ಕೋವಿಶೀಲ್ಡ್ ಲಸಿಕೆಯಿಂದ ಆರೋಗ್ಯದ ಮೇಲೆ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ. ಭಯ ಪಡದೆ ಲಸಿಕೆ ಪಡೆಯುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಹೇಳಿದರು.
ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಎರಡನೇ ಹಂತದ ಕೋವಿಶೀಲ್ಡ್ ಲಸಿಕೆಯನ್ನು ಸೋಮವಾರ ಪ್ರಥಮವಾಗಿ ಪಡೆದು, ಆನಂತರ ಮಾತನಾಡಿದರು.
‘ಫೆಬ್ರುವರಿ 8ರಿಂದ ಮೂರು ದಿನಗಳ ಕಾಲ ಕೋವಿಶಿಲ್ಡ್ ಲಸಿಕೆ ವಿತರಿಸಲಾಗುತ್ತದೆ. ಸ್ವತಃ ನಾನು ಲಸಿಕೆ ಪಡೆದಿದ್ದು ನನಗೆ ಯಾವುದೇ ಸಮಸ್ಯೆಯಾಗಿಲ್ಲ. ನೋಂದಣಿ ಮಾಡಿಸಿಕೊಂಡ ಎಲ್ಲಾ ಸಿಬ್ಬಂದಿ ಲಸಿಕೆ ಪಡೆಯಬೇಕು’ ಎಂದು ಹೇಳಿದರು.
‘ಕಂದಾಯ, ಪೊಲೀಸ್, ಪೌರ ಕಾರ್ಮಿಕರು, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿ ಸೇರಿದಂತೆ ಈಗಾಗಲೇ 5600 ಅಧಿಕಾರಿಗಳು ಮತ್ತು ಸಿಬ್ಬಂದಿ ಎರಡನೇ ಹಂತದ ಕೋವಿಡ್ ಲಸಿಕೆ ಪಡೆಯಲು ನೋಂದಣಿ ಮಾಡಿದ್ದಾರೆ. ನಿಗದಿತ ಅವಧಿಯಲ್ಲಿ ಕೋವಿಶೀಲ್ಡ್ ವಿತರಣಾ ಕೇಂದ್ರದಿಂದ ಲಸಿಕೆ ಪಡೆದು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಅಮೃತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಹರಿಬಾಬು, ಡಿವೈಎಸ್ಪಿ ಶಿವನಗೌಡ ಪಾಟೀಲ ಹಾಗೂ ಪೊಲೀಸ್ ಅಧಿಕಾರಿಗಳು ಕೋವಿಶೀಲ್ಡ್ ಲಸಿಕೆ ಪಡೆದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ಜಿಲ್ಲಾ ಶಸ್ತ್ರ ಚಿಕಿತ್ಸಕ ಅಧಿಕಾರಿ ಡಾ. ಶಂಕರ್, ರಿಮ್ಸ್ ನಿರ್ದೇಶಕ ಡಾ. ಬಸವರಾಜ್ ಪಿರಾಪೂರ, ಆರ್ಸಿ ಎಚ್ಓ ಡಾ. ವಿಜಯ ಸೇರಿದಂತೆ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.