ಮಸ್ಕಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ ಎಂದು ಲಿಂಗಸುಗೂರು ಸಹಾಯಕ ಆಯುಕ್ತ ಡಿನೀಸ್ ಸಸಿ ಹೇಳಿದರು. ಪಟ್ಟಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.
‘ಕೇಲಸದ ಒತ್ತಡ ಹೆಚ್ಚಾಗಿದ್ದು ಕ್ರೀಡೆಯಿಂದ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಬಹುದು. ಸರ್ಕಾರಿ ನೌಕರರು ಒಂದೇ ಎಂಬ ಭಾವದಿಂದ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು’ ಎಂದರು. ಗ್ರಾಮೀಣ ಭಾಗದ ಜನರು ತಮ್ಮ ಬಳಿ ಬಂದಾಗ ಅವರ ಸಮಸ್ಯೆಗಳನ್ನು ತಾಳ್ಮೆಯಿಂದ ಕೇಳಿ ಪರಿಹಾರ ಒದಗಿಸಿ ಎಂದು ನೌಕರರಿಗೆ ಕಿವಿಮಾತು ಹೇಳಿದರು.
ಸರ್ಕಾರಿ ನೌಕರರ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರಗೌಡ ಮಾತನಾಡಿ, ಕ್ರೀಡೆ ಎಂಬುದು ಮನುಷ್ಯನ ಕ್ರಿಯಾಶಿಲತೆ ಹೆಚ್ಚಿಸುತ್ತದೆ. ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಕ್ರೀಡೆ ಉತ್ಸಾಹ ತುಂಬಲಿದೆ ಎಂದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ, ಪುರಸಭೆ ಮುಖ್ಯಾಧಿಕಾರಿ ರೆಡ್ಡಿರಾಯನಗೌಡ, ಸರ್ಕಾರಿ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯ ರವೀಂದ್ರ ಉಪ್ಪಾರ, ಬಸನಗೌಡ ಪೊಲೀಸ್ ಪಾಟೀಲ್ ಇದ್ದರು. ಕೊಕ್ಕೊ, ಕಬಡ್ಡಿ, ವಾಲಿಬಾಲ್, ಕ್ರಿಕೆಟ್, ಚೆಸ್, ಬ್ಯಾಡ್ಮಿಂಟನ್, ಓಟದ ಸ್ಪರ್ಧೆ ಸೇರಿದಂತೆ ವಿವಿಧ ಕ್ರೀಡೆಗಳು ನಡೆದವು. ತಾಲ್ಲೂಕಿನ 400 ಕ್ಕೂ ಹೆಚ್ಚು ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.