ಲಿಂಗಸುಗೂರು: ‘ಕೋವಿಡ್ ನಿಯಮ ಗಳನ್ನು ಗಮನದಲ್ಲಿ ಇಟ್ಟುಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತ ಕ್ರಮವಾಗಿ ಜುಲೈ 15 ಮತ್ತು 17ರಂದು ಮಕ್ಕಳಿಗೆ ಅಣಕು ಪರೀಕ್ಷೆ ನಡೆಸುವುದು ಕಡ್ಡಾಯ’ ಎಂದು ಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ ಹೇಳಿದರು.
ಶುಕ್ರವಾರ ಶಿಕ್ಷಣ, ಆರೋಗ್ಯ, ಪೊಲೀಸ್ ಹಾಗೂ ತಾಲ್ಲೂಕು ಆಡಳಿತ ಸಹಯೋಗದಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಜುಲೈ 19 ಮತ್ತು 22ರಂದು ನಡೆಯಲಿರುವ ಪರೀಕ್ಷೆಗಳಿಗೆ ಈಗಾಗಲೆ ತಾಲ್ಲೂಕು ಆಡಳಿತ ಪೂರ್ಣ ತಯಾರಿ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಸಿಬ್ಬಂದಿ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕು. ಕರ್ತವ್ಯಲೋಪ ವೆಸಗುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಬಣ್ಣ ರಾಠೋಡ ಮಾತನಾಡಿ, ‘ತಾಲ್ಲೂಕಿನಲ್ಲಿ 5947 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. 27 ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೆ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಿ ತರಬೇತಿ ನೀಡಲಾಗಿದೆ. ಒಎಂಆರ್ ಶೀಟ್ ನೀಡುತ್ತಿದ್ದು ಮೇಲ್ವಿಚಾರಕರು ಜಾಗೃತರಾಗಿರಬೇಕು. ಮಕ್ಕಳನ್ನು ಗೈರು ಆಗದಂತೆ ನೋಡಿಕೊಳ್ಳಬೇಕು ಎಂದರು.
ತಹಶೀಲ್ದಾರ್ ಚಾಮರಾಜ ಪಾಟೀಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಮಾಕಾಪುರ, ಸಿಪಿಐ ಮಹಾಂತೇಶ ಸಜ್ಜನ ಮಾತನಾಡಿದರು.
ಕ್ಷೇತ್ರ ದೈಹಿಕ ಪರಿವೀಕ್ಷಕ ಚೆನ್ನಬಸವ ಮೇಟಿ ಅವರನ್ನು ಸತ್ಕರಿಸಲಾಯಿತು.
ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಚಂದ್ರಶೇಖರ ಕುಂಬಾರ. ಸಮೂಹ ಸಂಪನ್ಮೂಲ ಸಮನ್ವಯಧಿಕಾರಿ ಹನುಮಂತಪ್ಪ ಕುಳಗೇರಿ. ಸಾಬಣ್ಣ ವಗ್ಗರ, ಪ್ರಭುಲಿಂಗ ಗದ್ದಿ, ಮಲ್ಲಿಕಾರ್ಜುನ ಗೌಡರ್ ಹಾಗೂ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.