ADVERTISEMENT

ಪ್ರವಾಹ ಹಾನಿ ಪರಿಹಾರ ಕೋರಿ ಕೇಂದ್ರಕ್ಕೆ ಮನವಿ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 15:58 IST
Last Updated 5 ಆಗಸ್ಟ್ 2019, 15:58 IST
ರಾಯಚೂರು ಜಿಲ್ಲೆಯ ಕೃಷ್ಣಾ ನದಿತೀರ ಪ್ರವಾಹ ಪ್ರದೇಶವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೆಲಿಕಾಪ್ಟರ್‌ ಮೂಲಕ ಸೋಮವಾರ ಅವಲೋಕನ ಮಾಡಿದರು
ರಾಯಚೂರು ಜಿಲ್ಲೆಯ ಕೃಷ್ಣಾ ನದಿತೀರ ಪ್ರವಾಹ ಪ್ರದೇಶವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೆಲಿಕಾಪ್ಟರ್‌ ಮೂಲಕ ಸೋಮವಾರ ಅವಲೋಕನ ಮಾಡಿದರು   

ರಾಯಚೂರು: ಕೃಷ್ಣಾ ನದಿತೀರದಲ್ಲಿ ಪ್ರವಾಹದಿಂದ ನಾಲ್ಕು ಜಿಲ್ಲೆಗಳಲ್ಲಿ ಹಾನಿ ಉಂಟಾಗಿದ್ದು, ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸೋಮವಾರ ದೆಹಲಿಗೆ ಹೋಗುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಸೋಮವಾರ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ಹೆಲಿಕಾಪ್ಟರ್‌ ಮೂಲಕ ವೀಕ್ಷಿಸುವ ಪೂರ್ವ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಎರಡು ದಿನ ದೆಹಲಿಯಲ್ಲಿ ಪರಿಹಾರ ಕೋರಿ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಗುವುದು. ಪ್ರವಾಹದಿಂದ ಬೆಳೆಗಳಲ್ಲಿ ನೀರು ನಿಂತುಕೊಂಡಿದ್ದು, ಬೆಳೆಹಾನಿಯಾದರೆ ತಕ್ಷಣವೆ ಪರಿಹಾರ ಕೊಡುವುದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.

ADVERTISEMENT

ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಪೀಡಿತ 51 ಗ್ರಾಮಗಳನ್ನು ಸ್ಥಳಾಂತರಿಸಲು 2009ರಲ್ಲಿಯೇ ಕ್ರಮ ಕೈಗೊಳ್ಳಲಾಗಿತ್ತು. 1,138 ಮನೆಗಳ ನಿರ್ಮಾಣಕ್ಕೆ ಆದೇಶಿಸಲಾಗಿತ್ತು. ಅದರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಮನೆಗಳ ನಿರ್ಮಾಣ ಬಾಕಿ ಇವೆ. ಈಗಾಗಲೇ ನಿರ್ಮಾಣ ಮಾಡಿರುವ ಪುನರ್ವಸತಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಮಾಡುವುದಕ್ಕೆ ಈಗ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.