ರಾಯಚೂರು: ರಾಜ್ಯದಲ್ಲಿ ಶಾಲಾ ಕಾಲೇಜುಗಳು ಆರಂಭಗೊಂಡಿದ್ದು, ವಿಳಂಬ ನೀತಿ ಅನುಸರಿಸದೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಸರ್ಕಾರದ ಆದೇಶದನ್ವಯ ಮೇ ತಿಂಗಳಲ್ಲಿ ಶಾಲಾ ಕಾಲೇಜುಗಳು, ಮೇ 20ರಿಂದ ಪದವಿ ಪೂರ್ವ ಕಾಲೇಜುಗಳು ಆರಂಭಗೊಂಡಿವೆ. ತರಗತಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅಗತ್ಯವಾಗಿದೆ. ಆದರೆ, ಎರಡು ವಾರ ಕಳೆದರೂ ಬಸ್ಪಾಸ್ ದೊರೆಯದ ಕಾರಣ ವಿದ್ಯಾರ್ಥಿಗಳು ಟಿಕೆಟ್ ಹಣ ನೀಡಿ ಕಾಲೇಜಿಗೆ ಹೋಗುವಂತಾಗಿದೆ. ಪ್ರತಿ ಬಾರಿಯೂ ಶೈಕ್ಷಣಿಕ ವರ್ಷದ ಆರಂಭದಲ್ಲಿ ಈ ಸಮಸ್ಯೆ ಇರುತ್ತದೆ ಎಂದು ಜಿಲ್ಲಾಧಿಕಾರಿ ಮೂಲಕ ಸಾರಿಗೆ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಆರೋಪಿಸಿದರು.
ಆದ್ದರಿಂದ ತಡಮಾಡದೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಬೇಕು. ಬಸ್ ಪಾಸ್ ನೀಡುವವರೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೊಂದರೆ ತಪ್ಪಿಸಬೇಕು. 12 ತಿಂಗಳ ಅವಧಿಗೆ ಪಾಸ್ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಘಟಕ ಅಧ್ಯಕ್ಷ ಮಹೇಶ ಚೀಕಲಪರ್ವಿ, ಮಾರುತಿ, ಹೇಮಂತ, ಮಲ್ಲನಗೌಡ, ಕಾರ್ತಿಕ ಸೇರಿದಂತೆ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.