ರಾಯಚೂರು:ಪೌರತ್ವ ತಿದ್ದುಪಡೆ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ)ಗಳನ್ನು ಪ್ರಜಾತಂತ್ರ ವ್ಯವಸ್ಥೆ ವಿರುದ್ಧವಾಗಿ ಕೇಂದ್ರ ಸರ್ಕಾರ ಜಾರಿ ಮಾಡುತ್ತಿದೆ ಎಂದು ಆರೋಪಿಸಿ ತಿನ್ ಕಂದಿಲ್ ವೃತ್ತದಲ್ಲಿ ಮುಖಕ್ಕೆ ಕಪ್ಪು ಪಟ್ಟಿ ಕಟ್ಟಿಕೊಂಡು ಧರಣಿ ನಡೆಸಿದಸೋಷಲಿಸ್ಟ್ ಯೂನಿಟ್ ಸೆಂಟರ್ ಆಫ್ ಇಂಡಿಯಾ (ಎಸ್ಯುಸಿಐ–ಸಿ) ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡು ಬಿಡುಗಡೆ ಮಾಡಿದರು.
ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆ ಆನುಸರಿಸುತ್ತಿದೆ.ಸಿಎಎ ಕಾಯ್ದೆಯನ್ನು ವಾಪಸ್ ಪಡೆಯಬೇಕು. ಎನ್ಆರ್ ಸಿ ಪ್ರಸ್ತಾಪವನ್ನು ಕೈಬಿಡಬೇಕು ಮತ್ತು ನಿರುದ್ಯೋಗ, ಉದ್ಯೋಗ ನಾಶ, ಬೆಲೆ ಏರಿಕೆ ತಡೆಗಟ್ಟಬೇಕು ಎಂದು ಒತ್ತಾಯಿಸಿದರು.
ಸರ್ಕಾರ ನೀತಿಗಳ ವಿರೋಧಿ ಘೋಷಣೆಗಳ ಫಲಕಗಳನ್ನು ಪ್ರದರ್ಶಿಸಿದರು. ಧರಣಿ ಆರಂಭಿಸಿದ ಕೆಲವೇ ಹೊತ್ತಿನಲ್ಲಿ ಎಲ್ಲರನ್ನು ಬಂಧಿಸಲಾಯಿತು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ 144 ಕಲಂ ನಿಷೇಧಾಜ್ಞೆ ಉಲ್ಲಂಘಿಸಿದ ಎಸ್ ಯುಸಿಐ ಪಕ್ಷದ 15 ಕಾರ್ಯಕರ್ತರ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆ 71ರ ಕಲಂ ಪ್ರಕಾರ ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.