ರಾಯಚೂರು: ‘ಶಿಕ್ಷಕರ ಸೇವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲಿ ಗುರುಸ್ಪಂದನಾ ಕಾರ್ಯಕ್ರಮ ಆಯೋಜಿಸಿದೆ. ಶಿಕ್ಷಕರು ಗುರುಸ್ಪಂದನಾ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ ಹೇಳಿದರು.
ಇಲ್ಲಿನ ಹಾಷ್ಮೀಯಾ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಗುರುಸ್ಪಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ತಮ್ಮ ಮೂಲ ಸೇವಾ ಪುಸ್ತಕಗಳನ್ನು ಸಂಪೂರ್ಣವಾಗಿ ಪರಿಶೀಲಿಸಿಕೊಂಡ ನಂತರ ಎಲ್ಲವನ್ನು ಸಹಿ ಮಾಡಿದರೂ ಇನ್ನುಳಿದವುಗಳನ್ನು ಅಪ್ಡೇಟ್ ಆದ ನಂತರ ಸಹಿ ಮಾಡುತ್ತೇನೆ. ಅದು ನನ್ನ ಕರ್ತವ್ಯ. ನೀವು ಕೂಡ ಸರ್ಕಾರದ ಆದೇಶಗಳನ್ನು ಪಾಲಿಸುತ್ತಾ, ಶೈಕ್ಷಣಿಕ ಹಿತದೃಷ್ಟಿಯಿಂದ ವಿದ್ಯಾರ್ಥಿಗಳ ಗುಣಾತ್ಮಕ ಶಿಕ್ಷಣಕ್ಕಾಗಿ ನಾವೆಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡೋಣ’ ಎಂದು ತಿಳಿಸಿದರು.
ರಾಯಚೂರು ತಾಲ್ಲೂಕಿನ ಶಿಕ್ಷಕರು ತಮ್ಮ ಸೇವಾ ಪುಸ್ತಕವನ್ನು ಪರಿಶೀಲಿಸಿ ಅದರಲ್ಲಿ ಸೇವಾ ವಿವರ, ವೈಯಕ್ತಿಕ ವಿವರ, ಶೈಕ್ಷಣಿಕ ವಿವರಗಳು ನಮೂದಾಗಿರುವ ಬಗ್ಗೆ ಖಾತ್ರಿಪಡಿಸಿಕೊಂಡರು. ಕೆಲವು ಶಿಕ್ಷಕರ ಮಾಹಿತಿಗಳು ನಮೂದಾಗಿರಲಿಲ್ಲ. ಅಂತವರ ವಿವರಗಳನ್ನು ಸ್ಥಳದಲ್ಲಿ ನಮೂದಿಸಿ ಅವರಿಗೆ ಖಾತರಿ ಪಡಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.