
ರಾಯಚೂರು: 'ಅರ್ಹ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಹೇಳಿದರು.
ನಗರದ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಸ್ವೀಪ್ ಸಮಿತಿ ಹಾಗೂ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಶ್ರಯದಲ್ಲಿ ನಡೆದ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ- 2026ರ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ಕೊನೆಯ ದಿನವಾಗಿದೆ. ಅಲ್ಲಿವರೆಗೆ ಕಾಯದೇ ಕೂಡಲೇ ಹೆಸರು ನೋಂದಾಯಿಸಿಕೊಳ್ಳಬೇಕು. ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಮತದಾರರ ಪರಿಷ್ಕರಣೆ ಭಾಗವಾಗಿ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 25 ರಂದು ಪ್ರಕಟಿಸಿ ಡಿಸೆಂಬರ್ 10 ರೊಳಗೆ ಆಕ್ಷೇಪಣೆ ಸ್ವೀಕರಿಸಲಾಗುವುದು’ ಎಂದರು.
‘ಅಂತಿಮ ಮತದಾರರ ಪಟ್ಟಿಯನ್ನು 2025ರ ಡಿಸೆಂಬರ್ 30 ರಂದು ಪ್ರಕಟಿಸಲಾಗುವುದು. ಎಲ್ಲ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಈ ಕಚೇರಿಗಳಿಗೆ ಕಾಲಮಿತಿಯಲ್ಲಿ ಅರ್ಜಿ, ಆಕ್ಷೇಪಣೆ ಸಲ್ಲಿಸಬಹುದಾಗಿದೆ’ ಎಂದು ತಿಳಿಸಿದರು.
‘ರಿಮ್ಸ್ ಸಂಸ್ಥೆಯ ಎಲ್ಲ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಪ್ಪದೇ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಸಂವಿಧಾನವು ಪ್ರತಿಯೊಬ್ಬ ವ್ಯಕ್ತಿಗೂ ಮತದಾನ ಮಾಡುವ ಹಕ್ಕನ್ನು ನೀಡಿದೆ. ಹೆಸರು ನೋಂದಣಿ ಮಾಡಿಸಿದ್ದಲ್ಲಿ ಮಾತ್ರ ಮತದಾನ ಮಾಡಲಿಕ್ಕೆ ಅವಕಾಶ ಸಿಗಲಿದೆ’ ಎಂದು ಹೇಳಿದರು.
‘ಭಾರತದ ಪ್ರಜೆಯಾಗಿರುವ ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಹಾಗೂ 1ನೇ ನವೆಂಬರ್ 2025ಕ್ಕೆ ಮೊದಲ 6 ವರ್ಷಗಳ ಅವಧಿಯಲ್ಲಿ ಪ್ರೌಢಶಾಲೆಗಿಂತ ಕಡಿಮೆ ಇಲ್ಲದ ನಿರ್ಧಿಷ್ಟ ಪಡಿಸಿದಂತಹ ರಾಜ್ಯದೊಳಗಿನ ಯಾವುದೇ, ಸರ್ಕಾರದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾರೆ. ಅರ್ಜಿಯೊಂದಿಗೆ ಸಂಸ್ಥೆಯಿಂದ ಅನುಬಂಧ-2ರಲ್ಲಿ ಪಡೆದ ಪ್ರಮಾಣ ಪತ್ರ ಲಗತ್ತಿಸಬೇಕು’ ಎಂದು ತಿಳಿಸಿದರು.
ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ ಮಾತನಾಡಿದರು
ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ಬಿ.ಎಚ್.ರಮೇಶ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಅಧಿಕಾರಿ ಗುರುಸಿದ್ದಯ್ಯ ಸ್ವಾಮಿ ಹಿರೇಮಠ, ರಾಯಚೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಬಿ. ಬಡಿಗೇರ, ರಿಮ್ಸ್ ಸಂಸ್ಥೆಯ ಹೆಚ್ಚುವರಿ ಪ್ರಾಂಶುಪಾಲ ಮಂಜುನಾಥ, ಔಷಧ ವಿಭಾಗದ ಎಚ್ಒಡಿ ಡಾ.ಬಸವರಾಜ ಎಂ.ಪಾಟೀಲ, ಔಷಧ ವಿಭಾಗದ ಹೆಚ್ಚುವರಿ ಅಧಿಕಾರಿ ಡಾ.ಅರವಿಂದ ಸಂಗಾವಿ, ಶಿಶು ಅಭಿವೃದ್ಧಿ ಅಧಿಕಾರಿ ಮಂಜುನಾಥ, ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ, ಮತದಾರ ಸಾಕ್ಷರತಾ ಕ್ಲಬ್ನ ನೋಡಲ್ ಅಧಿಕಾರಿ ದಂಡಪ್ಪ ಬಿರಾದಾರ, ಚುನಾವಣಾ ಮಾಸ್ಟರ್ ಟ್ರೈನರ್ ಸದಾಶಿವಪ್ಪ ಉಪಸ್ಥಿತರಿದ್ದರು.
ಸದನದಲ್ಲಿ ಶಿಕ್ಷಕರ ಧ್ವನಿಯಾಗಲು ಶಿಕ್ಷಕರು ಇಚ್ಛಿಸುವ ಪ್ರತಿನಿಧಿಯ ಆಯ್ಕೆ ಮಾಡಲು ಮತದಾನದ ಮೂಲಕ ಅವಕಾಶ ದೊರೆಯಲಿದೆ.ಸುರೇಶ ವರ್ಮಾ ರಾಯಚೂರು ತಹಶೀಲ್ದಾರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.