ಶಕ್ತಿನಗರ: ಗಂಜಳ್ಳಿ ಗ್ರಾಮದ ಹಳ್ಳದಲ್ಲಿ ಸಾವಿರಾರು ಮೀನುಗಳು ಮೃತಪಟ್ಟಿವೆ. ಇದರಿಂದಾಗಿ ಹಳ್ಳದ ಸುತ್ತಮುತ್ತಲಿನ ಪ್ರದೇಶದಲ್ಲಿ ದುರ್ವಾಸನೆ ಹೆಚ್ಚಾಗಿದೆ.
ಹಳ್ಳದಲ್ಲಿ ಸಾಕಷ್ಟು ಮೀನುಗಳು ಇದ್ದಕ್ಕಿದ್ದಂತೆ ಸಾವನ್ನಪಿದ ಪರಿಣಾಮ ಗಂಜಳ್ಳಿ ಗ್ರಾಮದವರೆಗೂ ಕೊಳಕು ವಾಸನೆ ಬರುತ್ತಿದೆ. ಹಳ್ಳದ ಮಾರ್ಗದಿಂದ ಶಕ್ತಿನಗರಕ್ಕೆ ಬರುವವರು ಮೂಗು ಮುಚ್ಚಿಕೊಂಡು ಬರುವಂತಾಗಿದೆ. ಸತ್ತು ಬಿದ್ದಿರುವ ಮೀನಿನ ರಾಶಿಯ ಚಿತ್ರಗಳು ಹಾಗೂ ವಿಡಿಯೊ ತುಣಕು ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದೆ.
ಇದೇ ರೀತಿ ಹಿಂದೆಯೂ ಹಲವು ಬಾರಿ ಹಳ್ಳದಲ್ಲಿ ಸಾಕಷ್ಟು ಮೀನುಗಳು ಮೃತಪಟ್ಟಿದ್ದವು. ವಡ್ಲೂರು ಕೈಗಾರಿಕಾ ಪ್ರದೇಶದ ಕಂಪನಿಗಳಿಂದ ರಾಸಾಯನಿಕ ಮಲೀನ ನೀರು ಸೇರಿಕೊಂಡು ಬಹುತೇಕ ಹಳ್ಳ ಕಲುಷಿತಗೊಂಡಿದೆ. ಮೀನುಗಳು ಸಾವನ್ನಪ್ಪಲು ಇದು ಕೂಡ ಕಾರಣ ಇರಬಹುದು ಎಂಬ ಸಂಶಯ ವ್ಯಕ್ತವಾಗುತ್ತಿದೆ.
ಕಲುಷಿತ ನೀರು, ವಿಷಕಾರಕ ರಾಸಾಯನಿಕ ಅಂಶದ ಜತೆಗೆ ಈಚೆಗೆ ಸುರಿದ ಮಳೆಯಿಂದಾಗಿ ಜೀವವಾಯುವಿನ ಕೊರತೆ ಉಂಟಾಗಿದೆ. ಹೀಗಾಗಿ ಉಸಿರಾಟದ ತೊಂದರೆಯಿಂದಲೂ ಮೃತಪಟ್ಟಿರಬಹುದು ಎಂದು ಕೆಲವರು ಶಂಕೆ ವ್ಯಕ್ತಪಡಿಸಿದ್ದಾರೆ.
ಯಾವ ಕಾರಣಕ್ಕೆ ಮೀನುಗಳು ಮೃತಪಟ್ಟಿವೆ ಎಂಬುದನ್ನು ಮೀನುಗಾರಿ ಇಲಾಖೆ ಮತ್ತು ಪರಿಸರ ಮಾಲಿನ್ಯ ಅಧಿಕಾರಿಗಳು ಪರಿಶೀಲಿಸಿ ಖಚಿತಪಡಿಸಬೇಕು. ಇದು ಕೂಡ ಸಾಂಕ್ರಾಮಿಕ ರೋಗ ಹರಡಲು ಕಾರಣವಾಗಬಹುದು. ಅದನ್ನು ತಪ್ಪಿಸಲು ಕೂಡಲೇ ಮೀನುಗಳನ್ನು ಹೊರಗೆ ತೆಗೆಸಲು ಮುಂದಾಗಬೇಕು. ಈ ಮೂಲಕ ಇಲ್ಲಿನ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರು ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.