ADVERTISEMENT

ರಾಯಚೂರು: ಅಪಘಾತದಲ್ಲಿ ಗಾಯಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಚಿವ ಶರಣಪ್ರಕಾಶ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 13:12 IST
Last Updated 6 ಸೆಪ್ಟೆಂಬರ್ 2024, 13:12 IST
ಮಾನ್ವಿ ತಾಲ್ಲೂಕಿನ ಕಪಗಲ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ರಾಯಚೂರಿನ ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗುವಿನ ಆರೋಗ್ಯ ವಿಚಾರಿಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ
ಮಾನ್ವಿ ತಾಲ್ಲೂಕಿನ ಕಪಗಲ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ರಾಯಚೂರಿನ ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗುವಿನ ಆರೋಗ್ಯ ವಿಚಾರಿಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ   

ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಡಾ.ಶರಣಪ್ರಕಾಶ ಪಾಟೀಲ ಇಲ್ಲಿಯ ರಿಮ್ಸ್ ಹಾಗೂ ಸುರಕ್ಷಾ ಆಸ್ಪತ್ರೆಗೆ ಭೇಟಿ ನೀಡಿ ಮಾನ್ವಿ ತಾಲ್ಲೂಕಿನ ಕಪಗಲ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿದರು.

‘ಶಾಲಾ ಮಕ್ಕಳ ವಾಹನ ಅಪಘಾತವು ಆಘಾತ ಉಂಟು ಮಾಡಿದೆ. ಅಪಘಾತದಲ್ಲಿ ಮೃತಪಟ್ಟ ಇಬ್ಬರು ಬಾಲಕರ ಕುಟುಂಬಕ್ಕೆ ಸರ್ಕಾರ ತಲಾ ₹5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇನ್ನು ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ₹3 ಲಕ್ಷ ಪರಿಹಾರ ಘೋಷಣೆಯಾಗಿದೆ’ ಎಂದು ತಿಳಿಸಿದರು.

‘ಗಂಭೀರವಾಗಿ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿ ಮಧುಶ್ರೀ ಹಾಗೂ ಮಂಜುನಾಥ ಸ್ಥಿತಿ ಗಂಭೀರವಾಗಿದೆ. ಮತ್ತೊಬ್ಬ ಬಾಲಕಿ ತಲೆಗೆ ಬಲವಾಗಿ ಪೆಟ್ಟು ಬಿದ್ದಿದೆ. ಬಾಲಕಿಗೆ ಬೆಂಗಳೂರಿನ ನ್ಯೂರೋ ಸರ್ಜನ್ ಕನ್ಸಲ್ಟ್ ಮಾಡಲಾಗಿದೆ. ನಂದೀಶನ ಎರಡು ಕೈ ಗಾಯ ಆಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿಯಲು ತನಿಖೆ ನಡೆಸಿ ವರದಿ ಕೊಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ’ ಎಂದು ಹೇಳಿದರು.

ADVERTISEMENT

‘ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾಲಾ ಬಸ್‌ಗಳ ಸ್ಥಿತಿಗತಿ, ಚಾಲಕರ ದೈಹಿಕ ಸದೃಢತೆ, ಲೈಸನ್ಸ್‌ ನೀಡಲಾಗಿದೆಯೇ ಎನ್ನುವ ಕುರಿತು ವರದಿ ಕೊಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದರು.

ಮಾನ್ವಿ ಶಾಸಕ ಹಂಪಯ್ಯ ನಾಯಕ, ಸಿಂಧನೂರು ಶಾಸಕ ಹಂಪನಗೌಡ, ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ, ಜಿಲ್ಲಾಧಿಕಾರಿ ನಿತೀಶ ಕೆ., ರಾಯಚೂರು ಉಪ ವಿಭಾಗಾಧಿಕಾರಿ ಮೆಹಬೂಬಿ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮೆಹಬೂಬ ಜಿಲಾನಿ, ಜಿಲ್ಲಾ ರಿಮ್ಸ್ ನಿರ್ದೇಶಕ ರಮೇಶ, ಆಡಳಿತಾಧಿಕಾರಿ ಡಾ.ಕೆ.ಆರ್.ದುರುಗೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸುರೇಂದ್ರ ಬಾಬು, ರಾಯಚೂರು ತಹಶೀಲ್ದಾರ್ ಸುರೇಶ ವರ್ಮ, ರಿಮ್ಸ್ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.