
ರಾಯಚೂರು: ‘ಏನೇ ತೊಂದರೆಯಾದರೂ, ಎಷ್ಟೇ ಖರ್ಚಾದರೂ ತುಂಗಭದ್ರಾ ಡ್ಯಾಂಗೆ ಜೂನ್ ಒಳಗಡೆ ಹೊಸ ಕ್ರಸ್ಟ್ ಗೇಟ್ ಅಳವಡಿಸಿ, ಮುಂದಿನ ಮುಂಗಾರು ಬೆಳೆಗೆ ನೀರು ಹರಿಸಿ ರೈತರಿಗೆ ನೀಡಿದ ಮಾತು ಉಳಿಸಿಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಸಿಂಧನೂರು ತಾಲ್ಲೂಕಿನ ಅಂಬಾಮಠದ ಆವರಣದಲ್ಲಿ ಶನಿವಾರ ನಡೆದ ಅಂಬಾದೇವಿ ಮಹಾರಥೋತ್ಸವ ಮತ್ತು ಜಂಬೂ ಸವಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ₹ 431 ಕೋಟಿ ವೆಚ್ಚದಲ್ಲಿ ಪಾಪಯ್ಯ ಟನೆಲ್ ಕಾರ್ಯ ಮತ್ತು 33 ಗೇಟ್ ಅಳವಡಿಸುವ ಕಾರ್ಯ ಈಗಾಗಲೇ ನಡೆದಿದೆ’ ಎಂದು ತಿಳಿಸಿದರು.
‘ಸಿಂಧನೂರ ಕ್ಷೇತ್ರದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ನೀಡಿದ ಅನುದಾನವನ್ನು ಶಾಸಕ ಹಂಪನಗೌಡ ಬಾದರ್ಲಿ ಅವರು ಸದ್ಬಳಕೆ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ. ಸಿಂಧನೂರ ಕ್ಷೇತ್ರದ ಕುಡಿಯುವ ನೀರಿನ ಕೆರೆಗಳ ನಿರ್ಮಾಣ ಅಭಿವೃದ್ಧಿಗೆ ₹ 13.42 ಕೋಟಿ, ಸಾಲಗುಂದ ಏತ ನೀರಾವರಿ ಯೋಜನೆಗೆ ₹ 71 ಕೋಟಿ ರೂ., ಒಳಬಳ್ಳಾರಿ ಏತ ನೀರಾವರಿ ಯೋಜನೆಗೆ ₹ 43.10 ಕೋಟಿ, ಮುಳ್ಳೂರ ಗ್ರಾಮದ ಹತ್ತಿರ ಬ್ರಿಜ್ ಕಂ ಬ್ಯಾರೇಜ್ ಯೋಜನೆಗೆ ₹ 29 ಕೋಟಿ ವೆಚ್ಚ ಮಾಡಿ ಈ ಭಾಗದ ಅನ್ನದಾತರಿಗೆ ಅನುಕೂಲ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.
’42 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಹರಿಸುವ ಪ್ರಯತ್ನದಲ್ಲಿ ಈಗಾಗಲೇ 30 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಕೊಡಲಾಗಿದೆ. ಉಳಿದ 12 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಸಹ ನೀರು ಹರಿಸುವ ಕಾರ್ಯ ನಡೆಯುತ್ತಿದೆ. ರಾಯಚೂರು ಜಿಲ್ಲೆಯಲ್ಲಿ ಕೊನೆಯ ಭಾಗದ ರೈತರಿಗೆ ನೀರು ಕೊಡಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.
‘ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ ಎನ್ನುವುದು ಅಪ್ಪಟ ಸುಳ್ಳು. ನಾವು ಹಿಂದೆ ಬಿದ್ದಿಲ್ಲ. ಅಭಿವೃದ್ಧಿ ಕಾರ್ಯಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯ ಎರಡೂ ನಡೆಯುತ್ತಿವೆ. ಅನ್ನಭಾಗ್ಯ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿ, ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಇದುವರೆಗೆ ರಾಜ್ಯ ಸರ್ಕಾರವು ₹ 1,12,000 ಕೋಟಿ ಖರ್ಚು ಮಾಡಿದ್ದೇವೆ. ಪ್ರಸಕ್ತ 2026ನೇ ಸಾಲಿನಲ್ಲೂ ಮತ್ತೆ ₹ 52 ಸಾವಿರ ಕೋಟಿ ಖರ್ಚು ಮಾಡುತ್ತೇವೆ‘ ಎಂದರು.
ಶಾಸಕರಿಗೆ ಅಭಿನಂದನೆ: ‘ಸಿಂಧನೂರು ತಾಲೂಕಿನ ಸಮಸ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯೋಚಿಸಿ, 14 ಬಸ್ಗಳ ಸೌಕರ್ಯ ಕಲ್ಪಿಸುವಲ್ಲಿ ಶ್ರಮಿಸಿದ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆ ತಿಳಿಸುತ್ತೇನೆ‘ ಎಂದು ಮುಖ್ಯಮಂತ್ರಿಗಳು ಸಂತಸ ವ್ಯಕ್ತಪಡಿಸಿದರು.
ಅಂಬಾದೇವಿ ದರ್ಶನದಿಂದ ಸಂತಸ: ಸೋಮಲಾಪುರದ ಸಿದ್ಧಪರ್ವತಕ್ಕೆ ಆಗಮಿಸಿ ಅಂಬಾದೇವಿ ಮಹೋತ್ಸವ ಮತ್ತು ಜಂಬೂ ಸವಾರಿಗೆ ಸಂತೋಷದಿಂದ ಚಾಲನೆ ನೀಡಿದ್ದೇನೆ. ಅಂಬಾದೇವಿಯ ದರ್ಶನ ಪಡೆದಿರುವುದು ನನ್ನ ಪುಣ್ಯ ಎಂದೇ ಭಾವಿಸಿದ್ದೇನೆ ಎಂದು ತಿಳಿಸಿದ ಮುಖ್ಯಮಂತ್ರಿ ಅವರು ನೆರೆದಿದ್ದ ಎಲ್ಲ ಜನತೆಗೆ ಎಲ್ಲ ಭಕ್ತರಿಗೆ ತಾಯಿ ಅಂಬಾದೇವಿ ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಂಪನಗೌಡ ಬಾದರ್ಲಿ ಅಧ್ಯಕ್ಷತೆ ವಹಿಸಿದ್ದರು. ಲೋಕೋಪಯೋಗಿ ಸಚಿವ ಸಚಿವ ಸತೀಶ ಜಾರಕಿಹೊಳಿ, ಸಾರಿಗೆ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಿವರಾಜ ತಂಗಡಗಿ, ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ ಎಂ. ಪಾಟೀಲ, ಸಂಸದ ರಾಜಶೇಖರ ಹಿಟ್ನಾಳ, ಶಾಸಕರಾದ ಬಸನಗೌಡ ತುರವಿಹಾಳ, ಬಸನಗೌಡ ದದ್ದಲ್, ಬಿ.ಎಂ. ನಾಗರಾಜ, ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ, ಬಸವನಗೌಡ ಬಾದರ್ಲಿ, ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಜಿಲ್ಲಾಧಿಕಾರಿ ನಿತೀಶ್ ಕೆ., ಎಸ್ಪಿ ಅರುಣಾಂಗ್ಷು ಗಿರಿ, ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಸುಶೀಲಾ ಬಿ, ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ, ಸಿಂಧನೂರ ತಹಶೀಲ್ದಾರ್ ಅರುಣ ದೇಸಾಯಿ ಉಪಸ್ಥಿತರಿದ್ದರು.
‘ತಲಾ ಆದಾಯದಲ್ಲಿ ನಂಬರ್ 1’
ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಬಳಿಕ ತಲಾ ಆದಾಯದಲ್ಲಿ ಕರ್ನಾಟಕ ರಾಜ್ಯವು ಇಡಿ ದೇಶದಲ್ಲೇ ನಂಬರ್ 1 ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ‘ರಾಜಸ್ಥಾನ ರಾಜ್ಯ ಬಿಟ್ಟರೆ ಕರ್ನಾಟಕ ರಾಜ್ಯವು ಹೆಚ್ಚು ಒಣಭೂಮಿ ಇರುವ ಎರಡನೇ ರಾಜ್ಯವಾಗಿದೆ. ಇದು ನಮ್ಮ ಗಮನಕ್ಕಿದೆ. ಈ ಕಾರಣದಿಂದಾಗಿ ಸಿಂಧನೂರ ರಾಯಚೂರು ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಒತ್ತು ನೀಡಿ ನೀರಾವರಿ ಪ್ರದೇಶದ ವಿಸ್ತೀರ್ಣಕ್ಕೆ ಹಸೀರಿಕರಣಕ್ಕೆ ಒತ್ತು ಕೊಡುವ ಉದ್ದೇಶ ಹೊಂದಿದ್ದೇವೆ’ ಎಂದರು. ‘ಕೃಷ್ಣಾ ಮೇಲ್ಡಂಡೆ ಮೂರನೇ ಹಂತದ ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರವು ಇದುವರೆಗೆ ಗೆಜೆಟ್ ನೊಟಿಫಿಕೇಶನ್ ಮಾಡುತ್ತಿಲ್ಲ. 172 ಟಿಎಂಸಿ ಅಡಿ ನೀರು ಬಳಸಿಕೊಳ್ಳಲು ಯಾವುದೇ ಅಭ್ಯಂತರ ಇಲ್ಲ ಎಂಬುದಾಗಿ 2013ರಲ್ಲಿಯೇ ನ್ಯಾಯ ನಮ್ಮ ಪರವಾಗಿದೆ’ ಎಂದು ತಿಳಿಸಿದರು. ‘ಅಂಬಾಮಠದ ದೇವಸ್ಥಾನಕ್ಕೆ ನಿಗದಿಪಡಿಸಿದ ₹ 6.30 ಕೋಟಿ ಮಂಜೂರು ಮಾಡಲಾಗಿದೆ. ಈ ಪೈಕಿ ಇದುವರೆಗೆ 2 ಕೋಟಿ ವೆಚ್ಚ ಮಾಡಲಾಗಿದೆ. ಬಾಕಿ ಅನುದಾನವನ್ನು ಸಹ ಬಿಡುಗಡೆ ಮಾಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.