ADVERTISEMENT

ಬೀಜೋಪಚಾರದಿಂದ ನೆಟೆರೋಗ ನಿರ್ವಹಣೆ: ವಿಜ್ಞಾನಿ ಡಾ. ಶ್ರೀವಾಣಿ

ತೊಗರಿಯಲ್ಲಿ ಸಮಗ್ರ ಬೆಳೆ ನಿರ್ವಹಣೆಯ ಕ್ಷೇತ್ರೋತ್ಸವ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2021, 13:20 IST
Last Updated 4 ಡಿಸೆಂಬರ್ 2021, 13:20 IST
ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಅಡಕಲಗುಡ್ಡ ಗ್ರಾಮದಲ್ಲಿ ಐಸಿಎಆರ್‌–ಕೃಷಿ ವಿಜ್ಞಾನ ಕೇಂದ್ರದಿಂದ ಶುಕ್ರವಾರ ಏರ್ಪಡಿಸಿದ್ದ ’ತೊಗರಿಯಲ್ಲಿ ಸಮಗ್ರ ಬೆಳೆ ನಿರ್ವಹಣೆಯ ಕ್ಷೇತ್ರೋತ್ಸವ’ದಲ್ಲಿ ಮಣ್ಣು ವಿಜ್ಞಾನಿ ಡಾ.ಎಸ್.ಎನ್.ಭಟ್ ಮಾತನಾಡಿದರು
ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಅಡಕಲಗುಡ್ಡ ಗ್ರಾಮದಲ್ಲಿ ಐಸಿಎಆರ್‌–ಕೃಷಿ ವಿಜ್ಞಾನ ಕೇಂದ್ರದಿಂದ ಶುಕ್ರವಾರ ಏರ್ಪಡಿಸಿದ್ದ ’ತೊಗರಿಯಲ್ಲಿ ಸಮಗ್ರ ಬೆಳೆ ನಿರ್ವಹಣೆಯ ಕ್ಷೇತ್ರೋತ್ಸವ’ದಲ್ಲಿ ಮಣ್ಣು ವಿಜ್ಞಾನಿ ಡಾ.ಎಸ್.ಎನ್.ಭಟ್ ಮಾತನಾಡಿದರು   

ರಾಯಚೂರು: ಬಿತ್ತನೆ ಪೂರ್ವದಲ್ಲಿ ಪ್ರತಿ ಕೆಜಿ ಬೀಜಕ್ಕೆ 4 ಗ್ರಾಂ ಟ್ರೆಕೋಡರ್ಮಾ ಬೀಜೋಪಚಾರ ಮಾಡಿ ಬಿತ್ತನೆ ಕೈಗೊಂಡಲ್ಲಿ ನೆಟೆರೋಗದ ನಿರ್ವಹಣೆ ಮಾಡಬಹುದಾಗಿದೆ ಎಂದು ರಾಯಚೂರು ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರ ವಿಜ್ಞಾನಿ ಡಾ. ಶ್ರೀವಾಣಿ ಜಿ.ಎನ್. ಹೇಳಿದರು.

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಡಕಲಗುಡ್ಡ ಗ್ರಾಮದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಮೂಕಪ್ಪ ಅವರ ಕ್ಷೇತ್ರದಲ್ಲಿ ಶುಕ್ರವಾರ ಏರ್ಪಡಿಸಿದ್ದ ’ತೊಗರಿಯಲ್ಲಿ ಸಮಗ್ರ ಬೆಳೆ ನಿರ್ವಹಣೆಯ ಕ್ಷೇತ್ರೋತ್ಸವ’ದಲ್ಲಿ ಮಾತನಾಡಿದರು.

ಕೀಟ ಹಾಗೂ ರೋಗ ನಿರ್ವಹಣೆಯಲ್ಲಿ ಜೈವಿಕ ಪೀಡೆನಾಶಕಗಳ ಬಳಕೆ, ಮೋಹಕ ಬಲೆಗಳ ಉಪಯೋಗ ಹಾಗೂ ಸಮಗ್ರ ಕೀಟ ನಿರ್ವಹಣೆ ಮುಖ್ಯವಾಗಿದೆ. ತೊಗರಿ ಬೆಳೆಯಲ್ಲಿ ‘ಸಮಗ್ರ ಕೀಟ ನಿರ್ವಹಣೆ ಕೈಗೊಳ್ಳಬೇಕು. ಹಸಿರು ಕಾಯಿಕೊರಕದ ನಿರ್ವಹಣೆಗಾಗಿ ಬಿತ್ತನೆ ಸಮಯದಲ್ಲಿ ಪ್ರತಿ ಎಕರೆಗೆ 200 ಗ್ರಾಂ ಸೂರ್ಯಕಾಂತಿ, ಜೋಳದ ಕಾಳು ಮಿಶ್ರಣ ಮಾಡಿ ಬಿತ್ತಿದಲ್ಲಿ ಪಕ್ಷಿಗಳು ಕೂರಲು ಆಶ್ರಯ ಸಸ್ಯಗಳಾಗಿ ಸಹಕಾರಿಯಗುತ್ತವೆ ಎಂದು ಹೇಳಿದರು.

ADVERTISEMENT

ಕೀಟಗಳ ಸಮೀಕ್ಷೆಗಾಗಿ ಪ್ರತಿ ಎಕರೆಗೆ 2 ರಂತೆ ಮೊಹಕ ಬಲೆಗಳನ್ನು ಅಳವಡಿಸಿ. ಆರ್ಥಿಕ ನಷ್ಟ ರೇಖೆಗೆ ಅನುಗುಣವಾಗಿ ಕೀಟ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕು. ಮೊದಲನೆಯ ಸಿಂಪರಣೆಯಾಗಿ ತತ್ತಿನಾಶಕ ಕೀಟನಾಶಕವಾದ ಪ್ರೋಫೆನೊಪಾಸ್ ಕೀಟನಾಶಕವನ್ನು ಪ್ರತಿ ಲೀ. ನೀರಿಗೆ 2 ಮಿ.ಲೀ. ನಂತೆ ಬೆರೆಸಿ ಸಿಂಪಡಿಸಬೇಕು. ನಂತರ ಎರಡನೆ ಸಿಂಪರಣೆಯಾಗಿ ನೂತನ ಕೀಟನಾಶಕವನ್ನು ಸಿಂಪಡಿಸಿ ಪರಿಣಾಮಕಾರಿಯಾಗಿ ಹತೋಟಿ ಮಾಡಬಹುದು ಎಂದು ತಿಳಿಸಿದರು.

ಕೃಷಿ ವಿಶ್ವವಿದ್ಯಾಲಯದ ಬೀಜ ಘಟಕದ ವಿಜ್ಞಾನಿ ಡಾ.ಉಮೇಶ್ ಮಾತನಾಡಿ, ಅಡವಿಭಾವಿ ಗ್ರಾಮದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ಕಡಲೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ಪ್ರಾತ್ಯಕ್ಷಿಕೆಯನ್ನು ತೊಗರಿ ಬೆಳೆಯ ಟಿಎಸ್-3ಆರ್ ತಳಿಯನ್ನು ಆಯ್ಕೆ ಮಾಡಿ ಆಯ್ದ ರೈತರ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗಿತ್ತು. ಇದರ ವಿಶೇಷತೆ ಕುರಿತು ಅರಿವು ಮೂಡಿಸಲು ಕ್ಷೇತ್ರೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರಗತಿಪರ ರೈತ ಮೂಕಪ್ಪ ಅವರು ತೊಗರಿ ಬೇಸಾಯದಲ್ಲಿ ತಮ್ಮ ಅನುಭವ ಹಂಚಿಕೊಂಡರು. ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ.ಎಸ್.ಎನ್.ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾತ್ಯಕ್ಷಿಕೆಯಲ್ಲಿ 48 ರೈತರು ಭಾಗವಹಿಸಿ ಮಾಹಿತಿ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.