ರಾಯಚೂರು: ಫ್ಲೆಕ್ಸ್, ಬ್ಯಾನರ್ ಹಾಗೂ ಪ್ಲಾಸ್ಟಿಕ್ ನಿಷೇಧ ಮಾಡುವಲ್ಲಿ ನಗರಸಭೆ ನಿರ್ಲಕ್ಷ್ಯ ಧೋರಣೆ ತಾಳಿದ್ದು, ಅಗತ್ಯ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಹೈದರಾಬಾದ್ ಕರ್ನಾಟಕ ಘಟಕ ಹಾಗೂ ಜಿಲ್ಲಾ ಘಟಕ ಸದಸ್ಯರು ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.
2016ರ ಮಾರ್ಚ್ನಲ್ಲಿ ಪ್ಲಾಸ್ಟಿಕ್ ನಿಷೇಧ ಆದೇಶ ಹೊರಡಿಸಲಾಗಿದೆ. ಆದರೆ, ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಗರದಲ್ಲಿ ರಾಜಾರೋಷವಾಗಿ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಬಳಕೆ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಆದೇಶ ಪಾಲನೆಯಾಗುತ್ತಿದೆ. ಆದರೆ, ನಗರದಲ್ಲಿ ಮಾತ್ರ ಆದೇಶ ಪಾಲನೆ ಆಗುತ್ತಿಲ್ಲ ಎಂದು ಆರೋಪಿಸಿದರು.
ನಗರಸಭೆ ಯಾವುದೇ ಕಾನೂನು ಪಾಲಿಸದೇ ಬ್ಯಾನರ್ ಹಾಗೂ ಫ್ಲಕ್ಸ್ಗೆ ಅನುಮತಿ ನೀಡುತ್ತಿದ್ದು, ಪ್ಲಾಸ್ಟಿಕ್ ನಿಷೇಧವಿದ್ದರೂ ವ್ಯಾಪಾರಸ್ಥರು ರಾಜಾರೋಷವಾಗಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾರೆ. ರಾಜಕಾಲುವೆ ಮೇಲೆ ವ್ಯವಹಾರ ಮಾಡಲಾಗುತ್ತಿದೆ. ನಗರ ಬಸ್ ನಿಲ್ದಾಣದ ವ್ಯವಸ್ಥೆಯೂ ಇಲ್ಲವಾಗಿದ್ದು, ನಗರದಲ್ಲಿ ಮೂಲ ಸೌಕರ್ಯಗಳ ಕೊರತೆ ನೀಗಿಸುವಲ್ಲಿ ವಿಫಲವಾಗಿದೆ ಎಂದು ದೂರಿದರು.
ಹೈದರಾಬಾದ್ ಕರ್ನಾಟಕ ಅಧ್ಯಕ್ಷ ಇಮ್ರಾನ್ ಬಡೇಸಾಬ್, ಕಾನೂನು ಸಲಹೆಗಾರ ರಾಮಾಂಜನೇಯಲು, ಜಿಲ್ಲಾ ಘಟಕ ಅಧ್ಯಕ್ಷ ರಾಮು, ಖಾಜಾ ಅಸ್ಲಂ, ಸೈಯದ್ ನವಾಬ್, ಶ್ರೀಕಾಂತ, ಶಾಲಂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.