ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ ಪರಿಶಿಷ್ಟ ಪಂಗಡದವರು ಪರಿಶಿಷ್ಟ ಜಾತಿಯವರ ಮೇಲೆ ಹಲ್ಲೆ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಪರಿಶಿಷ್ಟ ಜಾತಿಯವರ ರಕ್ಷಣೆಗೆ ಜಿಲ್ಲಾಡಳಿತ ಶೀಘ್ರ ಕ್ರಮ ಜರುಗಿಸದಿದ್ದರೆ ಜಿಲ್ಲಾ ನ್ಯಾಯಾಲಯ ಎದುರಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಟಿಯುಸಿಐ ರಾಜ್ಯ ಘಟಕದ ಅಧ್ಯಕ್ಷ ಆರ್.ಮಾನಸಯ್ಯಎಚ್ಚರಿಕೆ ನೀಡಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಜ್ಜಬಂಡಿ ಗ್ರಾಮದ ಛಲವಾದಿ ಮಲ್ಲಪ್ಪನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣ ಜಾಲಹಳ್ಳಿ ಠಾಣೆಯಲ್ಲಿ ದಾಖಲಾಗಿ10 ದಿನಗಳು ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ. ಪರಿಶಿಷ್ಟ ಜಾತಿಯವರು ಭಯದಿಂದ ಜೀವನ ನಡೆಸುವಂತಾಗಿದೆ ಎಂದು ಹೇಳಿದರು.
ಮೋರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿ ಬಸವರಾಜ ನಾಗಡದಿನ್ನಿ ಕೃಷಿಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಾದರೂ, ಬಂಧನವಾಗಿಲ್ಲ. ಲಿಂಗದಳ್ಳಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹10 ಲಕ್ಷ ಅನುದಾನ ಮಂಜೂರಾಗಿ ಮೂರು ವರ್ಷ ಕಳೆದಿದ್ದು, ಪರಿಶಿಷ್ಟ ಪಂಗಡವರು ವಿರೋಧ ಮಾಡುತ್ತಿದ್ದಾರೆ. ಮೂರೂ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಜಿ.ಅಮರೇಶ, ರವಿ ದಾದಸ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.