ರಾಯಚೂರು: ನಗರದ ರಸ್ತೆಗಳಲ್ಲಿ ಸಂಚಾರ ನಿಯಮಗಳನ್ನು ಅನುಷ್ಠಾನಗೊಳಿಸುವುದಕ್ಕೆ ಸಂಚಾರ ಪೊಲೀಸರು ಬಿಗಿಯಾದ ಕ್ರಮ ಕೈಗೊಳ್ಳಬೇಕು. ಪ್ರಮುಖವಾಗಿ ಅಪ್ರಾಪ್ತ ವಿದ್ಯಾರ್ಥಿಗಳು ಬೈಕ್ ವಾಹನಗಳನ್ನು ಓಡಿಸುವುದರ ಮೇಲೆ ಕಡಿವಾಣ ಹಾಕಿ, ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಡಾ.ಬಿ.ಆರ್. ಅಂಬೇಡ್ಕರ್ ಯುವಕ ಸಂಘ ಅಧ್ಯಕ್ಷ ಆರ್. ಅಶೋಕಕುಮಾರ್ ಒತ್ತಾಯಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪರವಾನಿಗೆ ಇಲ್ಲದೆ ವಾಹನಗಳನ್ನು ಓಡಿಸುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಸಂಚಾರ ನಿಯಮಗಳ ಉಲ್ಲಂಘನೆಯಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಪಾಲಕರ ನಿರ್ಲಕ್ಷ್ಯವೂ ಪ್ರಮುಖ ಕಾರಣವಾಗಿದೆ. ಒಂದೇ ಬೈಕ್ನಲ್ಲಿ ಮೂವರು ಕುಳಿತು ಸಂಚರಿಸುವ ದೃಶ್ಯ ಸಾಮಾನ್ಯವಾಗಿದೆ. ಪೊಲೀಸರು ಸಮರ್ಪಕವಾಗಿ ಜನಜಾಗೃತಿ ಮೂಡಿಸುವ ಕೆಲಸ ಮಾಡುತ್ತಿಲ್ಲ ಎಂದು ಆಪಾದಿಸಿದರು.
ನಗರ ಮಧ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವುದೇ ಸಂಚಾರ ನಿಯಮ ಪಾಲನೆಯ ಫಲಕಗಳನ್ನು ಅಳವಡಿಸಿಲ್ಲ. ತಿರುವುಗಳ ಮಾಹಿತಿಯಿಲ್ಲ. ಸ್ಟೇಷನ್ ರಸ್ತೆಯುದ್ದಕ್ಕೂ ನಿಯಮಗಳನ್ನು ಉಲ್ಲಂಘಿಸಿ ವಾಹನಗಳ ನಿಲುಗಡೆಯಾಗುತ್ತಿದ್ದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಈ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳದಿದ್ದರೆ ಹೋರಾಟ ಆರಂಭಿಲಾಗುವುದು ಎಂದು ಎಚ್ಚರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.