ರಾಯಚೂರು: ನಗರದ ಗಂಜ್ ರಸ್ತೆಯಲ್ಲಿರುವ ಸಿಯಾತಲಾಬ್ ಕೊಳಚೆ ಪ್ರದೇಶದ ಸರ್ವೆ ನಂಬರ್ 33/1ರಲ್ಲಿನ 39 ಎಕರೆ 22ಗುಂಟೆ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನಗಳನ್ನು ಮಾಡಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಸದಸ್ಯರು ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು.
ನಗರದಲ್ಲಿನ 56 ಕೊಳಚೆ ಪ್ರದೇಶಗಳಲ್ಲಿ 15 ಸಾವಿರಕ್ಕೂ ಅಧಿಕ ಜನರು ನಿವೇಶನ ರಹಿತರಿದ್ದು, ಬಾಡಿಗೆ ಮನೆಯಲ್ಲಿ, ಟೆಂಟ್ಗಳಲ್ಲಿ ವಾಸ ಮಾಡುತ್ತಿದ್ದಾರೆ. ನಗರಸಭೆಗೆ 10 ಸಾವಿರಕ್ಕೂ ಅಧಿಕ ಅರ್ಜಿಗಳು ನಿವೇಶನಕ್ಕಾಗಿ ಸಲ್ಲಿಕೆಯಾಗಿವೆ. ಜಿಲ್ಲಾಡಳಿತ ಹಾಗೂ ನಗರಸಭೆಯ ನಿರ್ಲಕ್ಷ್ಯದಿಂದ ಸರ್ಕಾರಿ ಜಾಗದಲ್ಲಿ ನಕಲಿ ದಾಖಲೆಗಳೊಂದಿಗೆ ಕಟ್ಟಡ ಹಾಗೂ ವಾಣಿಜ್ಯ ಮಳಿಗೆನಿರ್ಮಾಣ ಮಾಡಿ ರಾಜಾರೋಷವಾಗಿ ವ್ಯವಹಾರ ನಡೆಸಲಾಗುತ್ತಿದೆ. ಯಾವ ಆಧಾರದಲ್ಲಿ ಕಟ್ಟಡ ನಿರ್ಮಾಣಕ್ಕೆ ನಗರಸಭೆ ಅನುಮತಿ ನೀಡಿದೆ ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ ಎಂದು ದೂರಿದರು.
ನಿವೇಶನ ನೀಡಲು ಒತ್ತಾಯಿಸಿದರೆ ಅಧಿಕಾರಿಗಳು ಸರ್ಕಾರಿ ಜಮೀನು ತೋರಿಸಿ ಮಂಜೂರು ಮಾಡುತ್ತೇವೆ ಎನ್ನುವ ಮೂಲಕ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಒತ್ತುವರಿ ತೆರವುಗೊಳಿಸಲು ಹಲವು ಹೋರಾಟಗಳು ನಡೆದರೂ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸಿಲ್ಲ. ಜಿಲ್ಲಾಧಿಕಾರಿ ಜೂನ್ 18ರಂದು ಪೌರಾಯುಕ್ತ ಹಾಗೂ ತಹಶೀಲ್ದಾರ ಮೂಲಕ ಸರ್ಕಾರಿ ಜಮೀನಿನಲ್ಲಿ ಅಕ್ರಮ ಕಟ್ಟಡಗಳನ್ನು ಕಟ್ಟಿಕೊಂಡು ಸ್ವಾಧೀನ ಹೊಂದಿದವರಿಗೆ ಜುಲೈ 4ರಂದು ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲು ಸೂಚಿಸಿದ್ದರೂ ಅಧಿಕಾರಿಗಳು ಕ್ಯಾರೆ ಎನ್ನದೇ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ, ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ ಬಡವರಿಗೆ ನಿವೇಶನ ಮಾಡಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಅಧ್ಯಕ್ಷ ಜನಾರ್ದನ ಹಳ್ಳಿಬೆಂಚಿ, ಉಪಾಧ್ಯಕ್ಷ ವೆಂಕಟೇಶ ಭಂಡಾರಿ, ಕೆ.ಪಿ.ಅನಿಲಕುಮಾರ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.