ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ವಾರ್ಡ್ ಸಂಖ್ಯೆ 7 ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಲಂ ಪ್ರದೇಶಗಳೆಂದು ಘೋಷಿಸಿ ಅಲ್ಲಿರುವ ಕುಟುಂಬಗಳಿಗೆ ನಿವೇಶನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ದಲಿತ ಸಮರ ಸೇನೆ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಡಳಿತ ಕಛೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಆನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಬಾಲಾಜಿ ಕ್ಯಾಂಪ್ನಲ್ಲಿ ಸುಮಾರು 100 ಕ್ಕೂ ಹೆಚ್ಚು, ಕವಿತಾಳ ಪಟ್ಟಣದ ವಾರ್ಡ್ ಸಂಖ್ಯೆ 4 ಹಾಗೂ ಮಾನ್ವಿ ಪಟ್ಟಣದ ವಾರ್ಡ್ ಸಂಖ್ಯೆ 9 ರಲ್ಲಿ ಕಡುಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ವಾಸವಾಗಿದ್ದಾರೆ. ಈ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿದೀಪ, ರಸ್ತೆ, ಚರಂಡಿ, ಶೌಚಾಲಯದಂತಹ ಮೂಲ ಸೌಕರ್ಯವಿಲ್ಲ ಎಂದು ದೂರಿದರು.
ಸ್ಲಂ ಅಭಿವೃದ್ಧಿ ಮತ್ತು ನಿರ್ಮೂಲನೆ ಕಾಯ್ದೆ 1973ರ ಅನ್ವಯ ಕೊಳಚೆ ಪ್ರದೇಶವೆಂದು ಘೋಷಣೆ ಮಾಡಿ ಮೂಲ ಸೌಕರ್ಯ ಕಲ್ಪಿಸಿ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಕುಮಾರ, ಜಿಲ್ಲಾ ಸಂಚಾಲಕ ನೀಲಕಂಠ, ಕರಿಯಪ್ಪ, ಹನುಮಂತಿ, ಶಿವಬಸ್ಸಮ್ಮ, ನರಸಿಂಹಲು ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.