ರಾಯಚೂರು: ರಾಜ್ಯದಾದ್ಯಂತ ಸರ್ಕಾರಿ ಭೂಮಿಯಲ್ಲಿರುವ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಆಗಸ್ಟ್ 20ರ ಸಚಿವ ಸಂಪುಟ ಸಭೆಯ ನಿರ್ಣಯದಂತೆ ನೊಂದಣಿ ಶುಲ್ಕವಿಲ್ಲದೇ ಉಚಿತವಾಗಿ ಮಾಲಿಕತ್ವ ನೀಡುವಂತೆ ಮಾರ್ಗಸೂಚಿ ರೂಪಿಸಬೇಕು ಎಂದು ಒತ್ತಾಯಿಸಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಯ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ವಸತಿ ಇಲಾಖೆಯ ರಾಜ್ಯ ಕಾರ್ಯದರ್ಶಿಗೆ ಸೋಮವಾರ ಮನವಿ ಸಲ್ಲಿಸಿದರು.
ಬಿಬಿಎಂಪಿ,ನಗರಸಭೆ,ಪುರಸಭೆ ಮಹಾನಗರ ಪಾಲಿಕೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ 1,873 ಕೊಳಚೆ ಪ್ರದೇಶಗಳ ಅಂದಾಜು 3,12,969 ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಪ್ರಸ್ತಾಪಿಸಿ ರಾಜ್ಯವನ್ನು ಗುಡಿಸಲು ಮುಕ್ತ ರಾಜ್ಯವನ್ನಾಗಿ ಮಾಡಲು ಮನೆ, ಸ್ವತ್ತುಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಸತಿ ಯೋಜನೆಗಳು ಜಾರಿಗೆ ತಂದರೂ ಕೂಡ ಪ್ರಯೋಜನವಾಗಿಲ್ಲ ಎಂದು ದೂರಿದರು.
ಹಕ್ಕುಪತ್ರ ನೀಡುವ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮಿತಿ ರಚಿಸಿ ಇದರಲ್ಲಿ ಇಬ್ಬರಿಗೆ ಸ್ಲಂ ಸಂಘಟನೆಗಳ ಪ್ರತಿನಿಧಿಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಜನಾರ್ದನ ಹಳ್ಳಿಬೆಂಚಿ, ನೂರಜಹಾನ್ ಬಸವರಾಜ ಹೊಸೂರು ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.