ರಾಯಚೂರು: ಶಾಸಕ ಡಾ.ಶಿವರಾಜ ಪಾಟೀಲರಿ ಅವರಿಗೆ ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ನಗರ ಬಿಜೆಪಿ ಘಟಕದ ವತಿಯಿಂದ ಕಾರ್ಯಕರ್ತರು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಕೇಂದ್ರ ಬಸ್ ನಿಲ್ದಾಣದ ಮಾರ್ಗವಾಗಿ ಬಿಜೆಪಿ ಜಿಲ್ಲಾ ಕಚೇರಿಯವರೆಗೂ ಶನಿವಾರ ಪಾದಯಾತ್ರೆ ನಡೆಸಿದರು.
ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ ಡಾ.ಶಿವರಾಜ ಪಾಟೀಲರ ಭಿತ್ತಪತ್ರ ಹಿಡಿದು ಜೈಕಾರ ಹಾಕಿದರು. ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರು ಶಿವರಾಜ ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.
ಎರಡು ಬಾರಿ ವಿಧಾನ ಸಭೆಗೆ ಆಯ್ಕೆಯಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಜಿಲ್ಲೆಗೆ ಸಚಿವ ಸ್ಥಾನ ನಿಡಿದರೆ ಹಲವಾರು ಅಭಿವೃದ್ಧಿ ಕಾರ್ಯಗಳು ಆಗಲಿವೆ. ಪಕ್ಷ ಸಂಘಟನೆಯಲ್ಲಿಯೂ ಮುಂಚೂಣಿಯಲ್ಲಿದ್ದು ಕೋವಿಡ್ ನಿರ್ವಹಣೆಯಲ್ಲಿ ರಿಮ್ಸ್ ಹಾಗೂ ಓಪೆಕ್ ಆಸ್ಪತ್ರೆಗಳ ಸುಧಾರಣೆ ಶ್ರಮಪಟ್ಟಿದ್ದು ಔಷಧಿ, ಹಾಸಿಗೆಗಳ ಸೌಲಭ್ಯದ ಬಗ್ಗೆ ಕಾಳಜಿವಹಿಸಿ ರೋಗಿಗಳ ಸಮಸ್ಯೆಗೆ ಸ್ಪಂದಿಸಿದ್ದಾರೆ.
ಕೊಳೆಗೇರಿ ಬಡಾವಣೆಗಳ ಅಭಿವೃದ್ಧಿಗೆ ವಸತಿ ಯೋಜನೆಯಡಿ ಮನೆ ನಿರ್ಮಿಸಿದ್ದಾರೆ. ಜಿಲ್ಲೆಯಲ್ಲಿ ಐಐಐಟಿ ಹಾಗೂ ವಿಮಾನ ನಿಲ್ದಾಣಕ್ಕೆ ಶ್ರಮ ವಹಿಸುತ್ತಿದ್ದಾರೆ ಎಂದು ಮನವಿ ಮಾಡಿದ್ದಾರೆ.
ಪಾದಯಾತ್ರೆಯಲ್ಲಿ ನೂರಾರು ಕಾರ್ಯಕರ್ತರು, ಮಹಿಳೆಯರು, ಯುವಕರು ಹಾಗೂ ಪಕ್ಷದ ಮುಖಂಡರು ತಂಡೋಪತಂಡವಾಗಿ ಜಮಾಯಿಸಿದ್ದರಿಂದ ಕೆಲಕಾಲ ಸಂಚಾರಕ್ಕೆ ಸಮಸ್ಯೆಯಾಯಿತು. ಆನಂತರ ಜಿಲ್ಲಾಧ್ಯಕ್ಷ ರಮಾನಂದ ಯಾದವ್ ಅವರ ಮೂಲಕ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.
ಪಾದಯಾತ್ರೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಬಿ.ಗೋವಿಂದ, ಪ್ರಧಾನಕಾರ್ಯದರ್ಶಿ ಪ್ರದೀಪ ಶಾನಬಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಸದಸ್ಯ ಚಂದ್ರಶೇಖರ, ಜಗದೀಶ ಮುಖಂಡ ಯು.ದೊಡ್ಡಮಲ್ಲೇಶಪ್ಪ, ನಾಗರಾಜ, ಈ.ಶಶಿರಾಜ, ಅಂಬಾಜಿ ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.