ADVERTISEMENT

ನ್ಯಾ.ಸದಾಶಿವ ಆಯೋಗ ವರದಿ ಯಥಾವತ್‌ ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2020, 13:01 IST
Last Updated 4 ಸೆಪ್ಟೆಂಬರ್ 2020, 13:01 IST
ನ್ಯಾ. ಎ.ಜೆ.ಸದಾಶಿವ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು ಎಂದು ರಾಷ್ಟ್ರೀಯ ಮಾದಿಗ ಜಾಗೃತ ಸೇನೆಯ ಪದಾಧಿಕಾರಿಗಳು ರಾಯಚೂರಿನಲ್ಲಿ ಶುಕ್ರವಾರ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು
ನ್ಯಾ. ಎ.ಜೆ.ಸದಾಶಿವ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು ಎಂದು ರಾಷ್ಟ್ರೀಯ ಮಾದಿಗ ಜಾಗೃತ ಸೇನೆಯ ಪದಾಧಿಕಾರಿಗಳು ರಾಯಚೂರಿನಲ್ಲಿ ಶುಕ್ರವಾರ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು   

ರಾಯಚೂರು: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ನೀಡುವ ಸಂಬಂಧ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರಕ್ಕೆ ಮೀಸಲಾತಿ ಜಾರಿ ಮಾಡುವ ಅಧಿಕಾರ ನೀಡಲಾಗಿದೆ. ಕೂಡಲೇ ಸೌಲಭ್ಯ ವಂಚಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು ಎಂದು ರಾಷ್ಟ್ರೀಯ ಮಾದಿಗ ಜಾಗೃತ ಸೇನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಆನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ವಿಧಾನ ಮಂಡಲ ಅಧಿವೇಶನದಲ್ಲಿ ಸರ್ವಾನುಮತದಿಂದ ಅಂಗೀಕರಿಸಿ ನ್ಯಾ. ಎ.ಜೆ.ಸದಾಶಿವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಕೇಂದ್ರ ಸರ್ಕಾರಕ್ಕೆ ಶಿಪಾರಸು ಮಾಡಬೇಕು. ಪರಿಶಿಷ್ಟ ಜಾತಿಯ ಮಾದಿಗ ಮತ್ತು ಮಾದಿಗ ಸಂಬಂಧಿತ ಉಪ ಜಾತಿಗಳಿಗೆ ನ್ಯಾಯ ದೊರಕಿಸಲು 101 ಜಾತಿಗಳ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಿದರೂ ವರದಿ ಈವರೆಗೆ ಜಾರಿಯಾಗಿಲ್ಲ ಎಂದರು.

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸಂವಿಧಾನದ ಪರಿಚ್ಛೇದ 341(2) ರ ತಿದ್ದುಪಡಿ ಮಾಡಲು ಸಂಸತ್ತಿನ ಮೇಲೆ ಒತ್ತಡ ತರಬೇಕು. ರಾಜ್ಯದ 101 ಪರಿಶಿಷ್ಟ ಜಾತಿಗಳ 96.60 ಲಕ್ಷ ಜನಸಂಖ್ಯೆ ಇದೆ. ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ. ಈ ಪೈಕಿ ಶೇ 33.47 ರಷ್ಟು ಎಡಗೈಯವರು, ಶೇ 32 ಬಲಗೈಯವರು, ಶೇ 23.64 ಸ್ಪೃಶ್ಯರು ಹಾಗೂ ಇತರೆ ಪರಿಶಿಷ್ಟ ಜಾತಿಯವರು ಶೇ 4.65 ರಷ್ಟು ಇದ್ದಾರೆ ಎಂದು ಧೃಡೀಕರಿಸಲಾಗಿದೆ.

ADVERTISEMENT

ಸದಾಶಿವ ವರದಿ ರಚನೆಯಾಗಿ 15 ವರ್ಷ, ವರದಿ ಸಲ್ಲಿಕೆಯಾಗಿ 7 ವರ್ಷಗಳು ಕಳೆಯುತ್ತಿವೆ. ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸಿದ್ದರಾಮಯ್ಯ ಅವರ ಆಡಳಿತಾವಧಿ ಸೇರಿ 13 ಬಾರಿ ಸಂಪುಟದಲ್ಲಿ ಚರ್ಚೆಯಾಗಿದೆ. ದಲಿತ ಮತಗಳ ಮೇಲೆ ಕಣ್ಣಿಟ್ಟಿರುವ ಸರ್ಕಾರ ವರದಿ ಜಾರಿಗೆ ಇಚ್ಛಾಶಕ್ತಿ ತೋರಿತ್ತಿಲ್ಲ. ವರದಿ ಶಿಫಾರಸು ತಿರಸ್ಕರಿಸುವ ಧೈರ್ಯವನ್ನು ಮಾಡದೇ ಎಲ್ಲಾ ರಾಜಕೀಯ ‍ಪಕ್ಷಗಳು ನ್ಯಾ. ಸದಾಶಿವ ವರದಿಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಗೌರವಾಧ್ಯಕ್ಷ ಬಸವರಾಜ ತಳವಾರ, ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಬೋರೆಡ್ಡಿ, ಶಿವಶಂಕರ, ಅಬ್ರಾಹಂ ಡಿ, ರಾಜಶೇಖರ, ರಾಜಶೇಖರ ಮಾಚರ್ಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.