ಲಿಂಗಸುಗೂರು: ‘12ನೇ ಶತಮಾನದ ವಚನ ಸಾಹಿತ್ಯ ಸರ್ವಶ್ರೇಷ್ಠ. ಆದರೆ ಸಾಹಿತ್ಯದ ತತ್ವಾದರ್ಶಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಸಂಪೂರ್ಣ ವಿಫಲರಾಗಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ ಹೇಳಿದರು.
ವಿಜಯಮಹಾಂತೇಶ್ವರ ಶಾಖಾ ಮಠದಲ್ಲಿ ಲಿಂಗೈಕ್ಯ ವಿಜಯ ಮಹಾಂತ ಶಿವಯೋಗಿಗಳ 108ನೇ ಪುಣ್ಯ ಸ್ಮರಣೋತ್ಸವ ಮತ್ತು ಲಿಂಗೈಕ್ಯ ಡಾ. ಮಹಾಂತ ಶಿವಯೋಗಿಗಳ ಸ್ಮರಣೋತ್ಸವ ನಿಮಿತ್ತ ಬುಧವಾರ ಆಯೋಜಿಸಿದ್ದ ಶರಣ ಸಂಸ್ಕೃತಿ ಉತ್ಸವ ಹಾಗೂ ವಿಶ್ವ ಧರ್ಮ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಭಾರತೀಯ ದಂಡ ಸಂಹಿತೆಯ ಮೂಲ ವಚನ ಸಾಹಿತ್ಯದ ಸಿಗುತ್ತದೆ’ ಎಂದು ವಿಶ್ಲೇಷಿಸಿದರು.
‘ವಚನಗಳ ಅಧ್ಯಯನ ಮಾಡುವವರು ಈ ನೆಲದ ಕಾನೂನು ಪಾಲನೆ ಮಾಡಬೇಕು. ಪ್ರತಿಯೊಬ್ಬರು ಗಿಡಮರಗಳನ್ನು ಬೆಳೆಸುವ ಜೊತೆಗೆ ಪರಿಸರ ಸಂರಕ್ಷಣೆಗೆ ಮುಂದಾಗಬೇಕು. ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.
ಶಿರೂರಿನ ಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ‘ದೇಶಕ್ಕೆ ಅಂಬೇಡ್ಕರ್ ಸಂವಿಧಾನ ನೀಡಿದ್ದಾರೆ. ಆದರೆ, ಬಸವಣ್ಣ ವಿಶ್ವಕ್ಕೆ ವಚನ ಸಾಹಿತ್ಯದ ಕೊಡುಗೆ ನೀಡಿದ್ದಾರೆ’ ಎಂದರು.
ಶಾಖಾ ಮಠದ ಪೀಠಾಧಿಪತಿ ಸಿದ್ಧಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಪ್ರವಚನಕಾರ ಬೆಳವಿ ಶರಣಬಸವ ದೇವರು ನೇತೃತ್ವ ವಹಿಸಿದ್ದರು. ಶರಣ ಸಾಹಿತಿ ಅಶೋಕ ಹಂಚಾಲಿ ಅನುಭಾವ ಹಂಚಿಕೊಂಡರು.
ಪಂಚಾಕ್ಷರಯ್ಯ ಹಿರೇಮಠ ದಂಪತಿ ಷಟ್ಸ್ಥಲ ಧ್ವಜಾರೋಹಣ ನೆರವೇರಿಸಿದರು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಅಲ್ಲಮಪ್ರಭು ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.