ADVERTISEMENT

ವೀರಶೈವ ಲಿಂಗಾಯತ ಒಳ ಪಂಗಡ ಓಬಿಸಿಗೆ ಸೇರಿಸಿ: ರಶೈವ ಲಿಂಗಾಯತ ಮಹಾಸಭಾ

ಮಠಾಧೀಶರು ಸೇರಿ ಸಮಾಜದ ಮುಖಂಡರಿಂದ ಭಾರಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 13:33 IST
Last Updated 1 ಆಗಸ್ಟ್ 2022, 13:33 IST
ರಾಯಚೂರಿನಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ಮಠಾಧೀಶರು ಮತ್ತು ಸಮಾಜದ ಮುಖಂಡರು ಸೋಮವಾರ ಪ್ರತಿಭಟನೆ ನಡೆಸಿದರು.
ರಾಯಚೂರಿನಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ಮಠಾಧೀಶರು ಮತ್ತು ಸಮಾಜದ ಮುಖಂಡರು ಸೋಮವಾರ ಪ್ರತಿಭಟನೆ ನಡೆಸಿದರು.   

ರಾಯಚೂರು: ಕೇಂದ್ರ ಸರ್ಕಾರವು ರಾಜ್ಯದಲ್ಲಿರುವ ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳನ್ನೆಲ್ಲ ಇತರೆ ಹಿಂದುಳಿದ ವರ್ಗಗಳ (ಓಬಿಸಿ) ಪಟ್ಟಿಗೆ ಸೇರ್ಪಡೆಗೊಳಿಸಲು ಒತ್ತಾಯಿಸಿ ವೀರಶೈವ ಲಿಂಗಾಯತ ಮಹಾಸಭಾ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಪ್ರತಿಭಟನೆ ಪೂರ್ವ ಸಮಾವೇಶಗೊಂಡಿದ್ದ ಸಮಾಜದ ಮುಖಂಡರು ಮತ್ತು ವಿವಿಧ ಮಠಗಳ ಸ್ವಾಮೀಜಿಗಳು ಸಮಾಜದ ಒಳಪಂಡಗಳಿಗೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಕುರಿತು ಪ್ರಸ್ತಾಪಿಸಿ, ಕೂಡಲೇ ನ್ಯಾಯ ಒದಗಿಸುವುದಕ್ಕೆ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಾತನಾಡಿದರು.

ಮುಖ್ಯವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ವೀರಶೈವ ಲಿಂಗಾಯತ ಒಳಪಂಡಗಳಿಗೆ ಅನ್ಯಾಯವಾಗುತ್ತಿದ್ದು, ಅವಕಾಶಗಳಿಲ್ಲದೆ ಯುವಕರು ನಿರುದ್ಯೋಗಿಗಳಾಗುತ್ತಿದ್ದಾರೆ. ಕರ್ನಾಟಕವೊಂದನ್ನು ಬಿಟ್ಟು ಬೇರೆ ರಾಜ್ಯಗಳಲ್ಲಿ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ರಾಜ್ಯದಲ್ಲಿ ಅನೇಕ ಸಲ ಮನವಿ ಸಲ್ಲಿಸುತ್ತಾ ಬಂದಿದ್ದರೂ ಸ್ಪಂದನೆ ದೊರೆಯುತ್ತಿಲ್ಲ ಎಂದು ತಿಳಿಸಿದರು.

ADVERTISEMENT

ಸಂವಿಧಾನದ ಅನುಚ್ಛೇದಗಳಾದ 15(4) ಮತ್ತು 16(4) ಹಿಂದುಳಿದ ವರ್ಗಗಳ ಮೀಸಲಾತಿಗೆ ಅವಕಾಶ ಕಲ್ಪಿಸಿದ್ದು, ಕೂಡಲೇ ಈ ಬಗ್ಗೆ ಸರ್ಕಾರಗಳು ಗಮನಹರಿಸಿ ವೀರಶೈವ ಲಿಂಗಾಯತ ಒಳಪಂಡಗಳನ್ನು ಓಬಿಸಿಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ವೀರಶೈವ ಕಲ್ಯಾಣ ಮಂಟಪದಿಂದ ಬಸವೇಶ್ವರ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಮಠಮಾರಿ ಬಿಚ್ಚಾಲಿ ಮಠದ ವೀರಭದ್ರ ಶಿವಾಚಾರ್ಯ, ನಿಲೋಗಲ್‌ ಮಠದ ಡಾ.ಚಂದ್ರಶೇಖರ್‌ ಶಿವಾಚಾರ್ಯ, ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ವೀರ ಶಿವಾಚಾರ್ಯ, ಮಾನ್ವಿ ಕಲ್ಮಠದ ಪಂಡಿತಾರಾಧ್ಯ ಶಿವಾಚಾರ್ಯ, ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ, ಶಾಸಕ ಡಾ.ಶಿವರಾಜ ಪಾಟೀಲ, ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್‌ ಪಾಟೀಲ, ಮುಖಂಡರಾದ ವೀರನಗೌಡ, ಶರಣಪ್ಪ ಮೇಟಿ, ಶಿವಬಸಪ್ಪ ಮಾಲಿಪಾಟೀಲ, ಶಿವಶರಣಪ್ಪ, ಡಾ.ಪರಮೇಶ್ವರ, ಭೀಮರೆಡ್ಡಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.