ಲಿಂಗಸುಗೂರು: ಕೃಷ್ಣಾ ಕೊಳ್ಳದ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ನಾರಾಯಣಪುರ ಜಲಾಶಯದಿಂದ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಬಿಟ್ಟ ಪರಿಣಾಮ ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ಬುಧವಾರ ಮುಳುಗಡೆಯಾಗಿದೆ.
ನಾರಾಯಣಪುರ ಅಣೆಕಟ್ಟೆ ಸಾಮರ್ಥ್ಯ 492.252 ಮೀ ಪೈಕಿ 491.110 ಮೀ ನೀರು ಸಂಗ್ರಹಕೊಂಡಿದೆ. 1.78 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಮುಳುಗಡೆ ಆಗುತ್ತಿರುವ ಸಂದರ್ಭದಲ್ಲೇ ಕೂಲಿಕಾರರು ಜೀವದ ಹಂಗು ತೊರೆದು ಸೇತುವೆಯನ್ನು ದಾಟಿ ದಡಕ್ಕೆ ಬಂದಿದ್ದಾರೆ.
ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದ್ದರಿಂದ ಹಂಚಿನಾಳ, ಯಳಗುಂದಿ, ಯರಗೋಡಿ, ಕಡದರಗಡ್ಡಿ ನಡುಗಡ್ಡೆ ಗ್ರಾಮಗಳ ಜನ 45 ಕಿ.ಮೀ ಸುತ್ತುವರಿದು ಬಾಹ್ಯ ಸಂಪರ್ಕ ಪಡೆಯುವಂತಾಗಿದೆ. ಕರಕಲಗಡ್ಡಿ, ಮ್ಯಾದರಗಡ್ಡಿ, ವಂಕಮ್ಮನಗಡ್ಡಿ ನಡುಗಡ್ಡೆಗಳು ಬಾಹ್ಯ ಸಂಪರ್ಕ ಕಳೆದುಕೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಪ್ರವಾಹ ಹೆಚ್ಚಾಗಿದ್ದರಿಂದ ನದಿ ತಟದಲ್ಲಿನ ಪಂಪ್ಸೆಟ್, ಪೈಪ್ಗಳು ಕೊಚ್ಚಿ ಹೋಗಿವೆ. ವಿದ್ಯುತ್ ಕಂಬಗಳು ವಾಲಿಕೊಂಡಿವೆ. ಪ್ರವಾಹ ಹೆಚ್ಚಾಗುತ್ತಿದ್ದಂತೆ ತಹಶೀಲ್ದಾರ್ ಶಂಶಾಲಂ ನಾಗಡದಿನ್ನಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಡುಗಡ್ಡೆ ಪ್ರದೇಶಗಳಿಗೆ ಭೇಟಿ ನೀಡಿ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದೆ.
ಹುಬ್ಬಳ್ಳಿ ವರದಿ: ಧಾರವಾಡ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಯ ವಿವಿಧೆಡೆ ಬುಧವಾರ ಮಳೆಯಾಯಿತು.
ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪೂರೆ ಬ್ಯಾರೇಜಿನಿಂದ ಕೃಷ್ಣಾ ನದಿಗೆ ಮತ್ತು ಕಲ್ಲೋಳ ಬಳಿಯ ಕೃಷ್ಣಾ ಸಂಗಮ ಸ್ಥಳದಲ್ಲಿ ದೂಧಗಂಗಾ ನದಿಗೆ ನೀರು ಹರಿಸಲಾಗುತ್ತಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ದೂಧಗಂಗಾ ಹಾಗೂ ವೇದಗಂಗಾ ನದಿಗಳ 8ಕ್ಕೂ ಹೆಚ್ಚು ಕಿರು ಸೇತುವೆಗಳು ಜಲಾವೃತಗೊಂಡಿದ್ದು, ಬುಧವಾರ ರಾಯಬಾಗ ತಾಲ್ಲೂಕಿನ ಕುಡಚಿ ಬಳಿಯೂ ಕೃಷ್ಣಾ ನದಿಯ ಬೃಹತ್ ಸೇತುವೆ ಮುಳುಗಡೆಯಾಯಿತು.
ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬುಧವಾರವೂ ಮಳೆಯ ಅಬ್ಬರ ಮುಂದುವರೆದಿದೆ. ತಾಲ್ಲೂಕಿನ ಕದ್ರಾ ಜಲಾಶಯದಿಂದ ಯಾವುದೇ ಕ್ಷಣ ನೀರನ್ನು ಹೊರಬಿಡಬಹುದು. ಕಾಳಿ ನದಿಪಾತ್ರದ ಪ್ರದೇಶದ ಜನರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿ) ಪ್ರಕಟಣೆ ತಿಳಿಸಿದೆ.
ಮಡಿಕೇರಿ ವರದಿ: ಕೊಡಗಿನ ಹಲವೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆ 8 ಗಂಟೆಗೆ ಕೊನೆ
ಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಮಡಿಕೇರಿ, ಭಾಗಮಂಡಲ, ಪೊನ್ನಂಪೇಟೆಯಲ್ಲಿ ತಲಾ 3 ಸೆಂ.ಮೀನಷ್ಟು ಮಳೆ ಸುರಿದಿದೆ.
ಭಾರಿ ಮಳೆ ಮುಂದುವರಿಕೆ ಸಾಧ್ಯತೆ
ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರವೂ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಆರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ರಾಮನಗರ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೆಳಗಾವಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಸೆಪ್ಟೆಂಬರ್ 3ರವರೆಗೂ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
ಶುಕ್ರವಾರ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಐದು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.