ರಾಯಚೂರು: ರಾಜ್ಯದ ಹೈಕೋರ್ಟ್ ಆದೇಶದಂತೆ ಅಕ್ರಮ ಮದ್ಯ ಮಾರಾಟವನ್ನು ತಕ್ಷಣದಿಂದ ನಿಯಂತ್ರಿಸಬೇಕು ಎಂದು ಒತ್ತಾಯಿಸಿ ಮದ್ಯ ನಿಷೇಧ ಆಂದೋಲನಾ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಮಹಿಳೆಯರು ನಗರದ ಟಿಪ್ಪುಸುಲ್ತಾನ ಉದ್ಯಾನದಲ್ಲಿ ಬುಧವಾರ ಧರಣಿ ನಡೆಸಿದರು.
ಆನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯದಲ್ಲಿ ಕಳೆದ ಆರು ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ರಾಜ್ಯದ ಹಳ್ಳಿಗಳ ಗಲ್ಲಿಗಳಲ್ಲಿಯೂ ಎಗ್ಗಿಲ್ಲದೇ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಈಗಾಗಲೇ ಮಹಿಳೆಯರು ಇಲಾಖೆಯ ಅಧಿಕಾರಿಗಳ ಹಲವು ಬಾರಿ ಗಮನಕ್ಕೆ ತಂದರೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ಇದೀಗ ಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ. ಯಾವ ಕಡೆಯೂ ಅಕ್ರಮ ಮದ್ಯ ಮಾರಾಟ ನಿಂತಿಲ್ಲ ಎಂದು ಆರೋಪಿಸಿದರು.
ನ್ಯಾಯಾಲಯದ ಆದೇಶದಂತೆ ತಕ್ಷಣವೇ ಅಕ್ರಮ ಮದ್ಯ ಮಾರಾಟ ನಿಲ್ಲಿಸಿ, ನ್ಯಾಯಾಲಯದ ಆದೇಶವನ್ನು 15 ದಿನಗಳೊಗೆ ಕಾರ್ಯರೂಪಕ್ಕೆ ತಂದು ಅಕ್ರಮಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಉಗ್ರ ಸ್ವರೂಪದ ಹೋರಾಟ ಆರಂಭಿಸುತ್ತೇವೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಸಂಚಾಲಕಿ ಮೋಕ್ಷಮ್ಮ, ವಿದ್ಯಾ ಪಾಟೀಲ್, ಮರಿಯಮ್ಮ, ಪಾರ್ವತಿ, ರಂಗಮ್ಮ, ಶರಣಮ್ಮ, ಲಕ್ಷ್ಮೀ, ಶಿವಮ್ಮ, ಈರಮ್ಮ ಬಸ್ಸಮ್ಮ, ಇಮ್ಯಾನುವೆಲ್, ಬಸವರಾಜ , ನರಸಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.