ADVERTISEMENT

ಸೈಕಲ್ ಸವಾರಿಯಿಂದ ಆರೋಗ್ಯ ವೃದ್ಧಿ: ಶಾಸಕ

ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಸೈಕ್ಲೋಥಾನ್ಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 16:15 IST
Last Updated 27 ಸೆಪ್ಟೆಂಬರ್ 2021, 16:15 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022ರ ನಿಮಿತ್ತ ಸೋಮವಾರ ಸೈಕ್ಲೋಥಾನ್‌ ನಡೆಸಲಾಯಿತು
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022ರ ನಿಮಿತ್ತ ಸೋಮವಾರ ಸೈಕ್ಲೋಥಾನ್‌ ನಡೆಸಲಾಯಿತು   

ರಾಯಚೂರು: ಮನುಷ್ಯನ ದೈಹಿಕ ಆರೋಗ್ಯ ಹಾಗೂ ಪರಿಸರ ಸಮತೋಲನ ಕಾಪಾಡುವಲ್ಲಿ ಸೈಕಲ್ ಸವಾರಿ ಉತ್ತಮ ಎಂದು ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಸೋಮವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022ರ ಸೈಕ್ಲೋಥಾನ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇಂದಿನ ದಿನಗಳಲ್ಲಿ ವಾತಾವರಣ ಬದಲಾವಣೆಯಿಂದಾಗಿ ಮಹಾಮಳೆ, ಚಂಡಮಾರುತ, ಸುನಾಮಿ ಮತ್ತು ಬರಗಾಲಗಳು ಸಂಭವಿಸಿ ಮಾನವನ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿವೆ. ವಾತಾವರಣ ಸಮತೋಲನ ಮಾಡುವುದಕ್ಕೆ ಪ್ಲಾಸ್ಟಿಕ್ ಬಳಕೆ, ಹಾಗೂ ವಾಹನಗಳ ಬಳಕೆ ಕಡಿಮೆ ಮಾಡಬೇಕಾಗಿದೆ. ಪ್ರತಿಯೊಬ್ಬ ಅಧಿಕಾರಿಗಳು ಮತ್ತು ಸಿಬ್ಬಂದಿ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಸೈಕಲ್ ಸವಾರಿ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು ಮಾತನಾಡಿ, ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ ಪರಿಸರ ಉಳಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಸಾಗಟ ಸಂಪೂರ್ಣವಾಗಿ ನಿಷೇಧ ಹೇರಲಾಗುತ್ತಿದೆ. ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆ ಮಾಡಬಾರದು. ಸಿಟಿ ಅಭಿವೃದ್ಧಿಗಾಗಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ವಾಹನಗಳ ಬಳಕೆ ಕಡಿಮೆ ಮಾಡಬೇಕು. ಸೈಕಲ್ ಸವಾರಿ ಹೆಚ್ಚು ಮಾಡಬೇಕು. ಸೈಕಲ್ ಸವಾರಿ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ವರ್ಷಪೂರ್ತಿ ಸೈಕಲ್ ಬಳಕೆ ಮಾಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಮಾತನಾಡಿದರು.

ಶಾಸಕ ಬಸನಗೌಡ ದದ್ದಲ್, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ.ಕೆ.ಎಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ, ರಾಜ್ಯ ಪುರಾತತ್ವ ಇಲಾಖೆಯ ಅಧಿಕಾರಿ ಶಿವು ಪ್ರಕಾಶ್, ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ಮಹಮದ್ ರಫೀ, ಕವಿತಾ, ಹನುಮಂತ ನಾಯಕ, ಸಂದೀಪ್ ರಜಪೂತ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.