ADVERTISEMENT

ರಾಯಚೂರು ನಗರದ ಕ್ರೀಡಾಂಗಣಕ್ಕೆ ಅನುದಾನ: ಆಕ್ಷೇಪ

ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 16:04 IST
Last Updated 17 ಫೆಬ್ರುವರಿ 2021, 16:04 IST
ರಾಯಚೂರಿನಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ದುರುಗಪ್ಪ ಅಧ್ಯಕ್ಷತೆಯಲ್ಲಿ ಸಭೆ ಬುಧವಾರ ನಡೆಯಿತು 
ರಾಯಚೂರಿನಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ದುರುಗಪ್ಪ ಅಧ್ಯಕ್ಷತೆಯಲ್ಲಿ ಸಭೆ ಬುಧವಾರ ನಡೆಯಿತು    

ರಾಯಚೂರು: ನಗರದ ಕ್ರೀಡಾಂಗಣ ಅಭಿವೃದ್ಧಿಗೆ ಜಿಲ್ಲಾ ಪಂಚಾಯಿತಿಯಿಂದ ₹28 ಲಕ್ಷ ಅನುದಾನ ಬಿಡುಗಡೆ ಮಾಡಿರುವುದಕ್ಕೆ ಸ್ಥಾಯಿ ಸಮಿತಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ದುರುಗಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡದೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಏಕಪಕ್ಷೀಯವಾಗಿ ರಾಯಚೂರಿನ ಜಿಲ್ಲಾಕ್ರೀಡಾಂಗಣಕ್ಕೆ ಅನುದಾನ ಬಿಡುಗಡೆ ಮಾಡಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂದು ಶಿಕ್ಷಣ,ಆರೋಗ್ಯ ಸ್ಥಾಯಿ ಸಮಿತಿ ಸದಸ್ಯ ಎನ್.ಕೇಶವರೆಡ್ಡಿ ಹೇಳಿದರು.

ADVERTISEMENT

ಸಿಇಓ ಅವರು ಏಕಪಕ್ಷೀಯವಾಗಿ ತೀರ್ಮಾನ ಮಾಡಿರುವುದು ಸರಿಯಲ್ಲ. ನಗರ ಪ್ರದೇಶದಲ್ಲಿ ಕ್ರೀಡಾಂಗಣ ಅಭಿವೃದ್ಧಿ ಪಡಿಸಲು ಜಿಲ್ಲಾ ಪಂಚಾಯಿತಿ ಅನುದಾನ ಬಿಡುಗಡೆ ಮಾಡುವುದಕ್ಕೆ ಬರುವುದಿಲ್ಲ. ಬಿಡುಗಡೆ ಮಾಡಿರುವ ಅನುದಾನವನ್ನು ಕೂಡಲೇ ಹಿಂಪಡೆಯಬೇಕು ಎಂದು ತಿಳಿಸಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಆಟದ ಮೈದಾನ ನಿರ್ಮಾಣ ಮತ್ತು ಅಭಿವೃದ್ಧಿ ಪಡಿಸಲು ಅನುದಾನ ಬಳಕೆ ಮಾಡಿಕೊಳ್ಳಬೇಕು. ಆದರೆ ನಗರದ ಕ್ರೀಡಾಂಗಣಕ್ಕೆ ಅನುದಾನ ನೀಡಿರುವುದು ಸರಿಯಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ತಾಲ್ಲೂಕಿನ ಉಡಮಗಲ್, ಗಧಾರ ಗ್ರಾಮದಲ್ಲಿ ಬಯಲುರಂಗಮಂದಿರ ನಿರ್ಮಾಣಕ್ಕೆ ₹7.76 ಲಕ್ಷ ಸಭೆಯಲ್ಲಿ ಚರ್ಚೆಸದೆ ಅನುಮೋದನೆ ಪಡೆಯಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ ಅವರಿಗೆ ಸೂಚನೆ ನೀಡಿದರು.

ಲಿಂಗಸೂಗೂರು ತಾಲ್ಲೂಕಿನ ಮಟ್ಟೂರು, ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಯುನಾನಿ ಚಿಕಿತ್ಸಾಲಯ ನಿರ್ಮಿಸಿ ಸುಮಾರು ವರ್ಷಗಳು ಕಳೆದರೂ ಇದುವರೆಗೆ ಇಲಾಖೆಗೆ ಹಸ್ತಾಂತರ ಮಾಡದೆ ಇರುವುದಕ್ಕೆ ಕೆಆರ್‌ಐಡಿಎಲ್‌ ಅಧಿಕಾರಿ ಗೋಖಲೆ ಅವರನ್ನು ಸದಸ್ಯರು ತರಾಟೆಗೆತೆಗೆದುಕೊಂಡರು. ಕಟ್ಟಡ ಹಸ್ತಾಂತರ ಮಾಡಲು ಆಗದಿದ್ದರೆ ಕಟ್ಟಡಗಳನ್ನು ಬಾಡಿಗೆ ನೀಡುವಂತೆ ಟೀಕಿಸಿದರು.

ಕಾಲಮಿತಿಯೊಳಗೆ ಪೂರ್ಣಗೊಳಿಸದಿದ್ದರೆ ಕ್ರಮ ಜರುಗಿಸಲು ಸರ್ಕಾರಕ್ಕೆ ಪತ್ರ ಬರೆಯಬೇಕಾಗುತ್ತದೆ ಎಂದುತಾಕೀತು ಮಾಡಿದರು. 2017-18ನೇ ಸಾಲಿನಲ್ಲಿ ಯುನಾನಿ ಚಿಕಿತ್ಸಾಲಯ ಕಟ್ಟಡ ನಿರ್ಮಾಣಕ್ಕೆ ₹40 ಲಕ್ಷ ಅನುದಾನ ಬಿಡುಗಡೆಯಾಗಿ ಮೂರು ವರ್ಷಗಳಾದರೂ ಕಾಮಗಾರಿ ನಿರ್ವಹಿಸದ ಕ್ಯಾಷುಟೆಕ್, ನಿರ್ಮಿತಿ ಕೇಂದ್ರದ ಏಜೆನ್ಸಿಗಳು ಅನುದಾನ ವಾಪಸು ನೀಡಿರುವುದಕ್ಕೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಆನಂತರ ಏಜೆನ್ಸಿಗಳು ಬಡ್ಡಿ ಸಮೇತ ಹಣ ವಸೂಲಿ ಮಾಡಬೇಕು ಎಂದು ಪಟ್ಟು ಹಿಡಿದರು.

ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಏಜೆನ್ಸಿಯವರು ಜವಾಬ್ದಾರಿಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಸದಸ್ಯರಾದ ಅಮರೇಗೌಡ, ಶರಣೆಗೌಡ ಮಾಲಿಪಾಟೀಲ, ಕೆ.ಪದ್ಮಾವತಿ,ರತ್ನಮ್ಮ, ಯಂಕೋಬಾ, ಉಪಕಾರ್ಯದರ್ಶಿ ಮಹ್ಮದ್‍ಇಸ್ಮಾಯಿಲ್‍ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.