ಕನಕಪುರ: ಪಟ್ಟಣದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ 8ನೇ ವಾರ್ಡಿನ ಸದಸ್ಯ ವಕೀಲ ರಾಮಚಂದ್ರ ಅಧ್ಯಕ್ಷರಾಗಿ, 25ನೇ ವಾರ್ಡಿನ ಸದಸ್ಯೆ ಹೇಮರಾಜು ಉಪಾಧ್ಯಕ್ಷೆಯಾಗಿ ಅವಿರೋಧ ಆಯ್ಕೆಯಾದರು.
ಅಧ್ಯಕ್ಷ ಸ್ಥಾನವು ಹಿಂದುಳಿದ ‘ಎ’ ವರ್ಗಕ್ಕೆ ಮೀಸಲಾಗಿತ್ತು. ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 27 ಸಂಖ್ಯಾಬಲವನ್ನು ಹೊಂದಿದ ಪುರಸಭೆಯಲ್ಲಿ ಕಾಂಗ್ರೆಸ್ 22 ಸದಸ್ಯರನ್ನು, ಜೆಡಿಎಸ್ನ4 ಸದಸ್ಯರು, ಒಬ್ಬ ಪಕ್ಷೇತರ ಸದಸ್ಯರು ಇದ್ದಾರೆ.
ಎಲ್ಲಾ ಸದಸ್ಯರ ಒಮ್ಮತದ ಅಭ್ಯರ್ಥಿಯಾಗಿ ವಕೀಲ ರಾಮಚಂದ್ರ ಅಧ್ಯಕ್ಷ ಸ್ಥಾನಕ್ಕೆ, ಹೇಮರಾಜು ಉಪಾದ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಹಶೀಲ್ದಾರ್ ಶಿವರುದ್ರಪ್ಪ ಇಬ್ಬರ ಅವಿರೋಧ ಆಯ್ಕೆ ಘೋಷಣೆ ಮಾಡಿದರು.
ಕಾಂಗ್ರೆಸ್ ಮುಖಂಡರಾದ ಎಸ್.ರವಿ, ಆರ್.ಕೃಷ್ಣಮೂರ್ತಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಡಿ.ವಿಜಯದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿಲೀಪ್, ಎಂ.ಪುರುಷೋತ್ತಮ್, ತಾಲ್ಲೂಕಿನ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಜಿಲ್ಲಾ ತಾಲ್ಲೂಕು ಪಂಚಾಯಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಯ ಮುಖ್ಯಸ್ಥರು, ವಕೀಲರು, ಪುರಸಭೆ ಅಧಿಕಾರಿಗಳು ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು.
ವಿಶ್ವಾಸಕ್ಕೆ ಧಕ್ಕೆ ತರುವುದಿಲ್ಲ: ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಚಂದ್ರ ಅವರು, ‘ಯಾರ ವಿಶ್ವಾಸಕ್ಕೂ ಧಕ್ಕೆ ಬಾರದಂತೆ ಕೊಟ್ಟಿರುವ ಜವಾಬ್ದಾರಿಯನ್ನು ದುರುಪ-ಯೋಗ ಪಡಿಸಿಕೊಳ್ಳದೆ ವಿಶ್ವಾಸರ್ಹವಾಗಿ ಕೆಲಸ ಮಾಡುತ್ತೇನೆ ಎಂದರು.
ಪಟ್ಟಣವು ಅತೀ ವೇಗವಾಗಿ ಬೆಳೆಯುತ್ತಿದ್ದು ಅಷ್ಟೇ ವೇಗದಲ್ಲಿ ಮೂಲಸೌಕರ್ಯ ಸಮಸ್ಯೆಗಳೂ ಎದುರಾಗುತ್ತಿವೆ. ಭವಿಷ್ಯದ ದೃಷ್ಟಿಯಿಂದ ಬೆಳೆಯುತ್ತಿರುವ ನಗರಕ್ಕೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಿ ಕಾರ್ಯ ನಿರ್ವಹಿಸಲಾಗುವುದು.ಉತ್ತಮ ಆಡಳಿತಕ್ಕಾಗಿ ಸಾರ್ವಜನಿಕರು ತಮ್ಮ ಸಲಹೆ ಸೂಚನೆ ನೀಡಬಹುದಾಗಿದೆ ಎಂದರು.
ಅಭಿನಂದನೆ: ಅಧ್ಯಕ್ಷ ಸ್ಥಾನ ಅಲಂಕರಿಸಲು ಅವಕಾಶ ಕಲ್ಪಿಸಿಕೊಟ್ಟ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರಿಗೆ ಅವರು ಇದೇ ವೇಳೆ ಕೃತಜ್ಞತೆ ಸಲ್ಲಿಸಿದರು.
ಉಪಾಧ್ಯಕ್ಷೆ ಹೇಮರಾಜು ಮಾತನಾಡಿ, ‘ಜನರ ಸಮಸ್ಯೆಗೆ ಸ್ಪಂದಿಸುವ ಮೂಲಕ ಪಟ್ಟಣದಲ್ಲಿನ ಅಗತ್ಯ ಮೂಲ ಸೌಕರ್ಯ ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.