ಚನ್ನಪಟ್ಟಣ: ಮಕ್ಕಳ ಮೂಲಭೂತ ಹಕ್ಕನ್ನೇ ಕಸಿದುಕೊಂಡು ಅವರ ಜೀವನವನ್ನು ಹಾಳು ಮಾಡುವುದು ಸರಿಯಲ್ಲ ಎಂದು ಮುಖ್ಯಶಿಕ್ಷಕಿ ಶಬಾನಾ ಬೇಗಂ ಹೇಳಿದರು.
ಪಟ್ಟಣದ ಬಾಲು ಪಬ್ಲಿಕ್ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಮತ್ತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿಕ್ಷಣ ಪಡೆಯುವುದು ಮಕ್ಕಳ ಹಕ್ಕು, ಈ ಸಮಯದಲ್ಲಿ ಅವರಿಂದ ದುಡಿಸಿಕೊಳ್ಳುವುದು ಸರಿಯಲ್ಲ ಎಂದು ತಿಳಿಸಿದರು. ಬೈಕ್ ಗ್ರಾರೇಜ್ಗಳು, ಮಾರುಕಟ್ಟೆ, ಸೈಕಲ್ ಶಾಪ್ಗಳಲ್ಲಿ ಇಂದಿಗೂ ಬಾಲಕಾರ್ಮಿಕ ಪದ್ಧತಿ ಚಾಲ್ತಿಯಲ್ಲಿದೆ. ಹಿಂದೆ ಬಡತನದಿಂದಾಗಿ ಮಕ್ಕಳನ್ನು ಚಿಕ್ಕವಯಸ್ಸಿನಲ್ಲಿಯೇ ಕೆಲಸಕ್ಕೆ ಸೇರಿಸುತ್ತಿದ್ದರು. ಅವರು ಇಂದಿಗೂ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗದೇ ಕಷ್ಟ ಪಡುತ್ತಿದ್ದಾರೆ ಎಂದು ತಿಳಿಸಿದರು.
ಶಿಕ್ಷಕಿ ಕವಿತಾ ಮಾತನಾಡಿ, ಮಕ್ಕಳನ್ನು ಕೆಲಸಕ್ಕೆ ಕಳುಹಿಸುವುದು ಮತ್ತು ಅವರಿಂದ ಕೆಲಸ ಮಾಡಿಸಿಕೊಳ್ಳುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ ಎಂದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕೇವಲ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ, ಸಾರ್ವಜನಿಕರ ಸಹಕಾರವೂ ಅಗತ್ಯವಾಗಿ ಬೇಕು ಎಂದರು.
ಬಾಲಕಾರ್ಮಿಕರು ಕಂಡು ಬಂದಲ್ಲಿ ಪೊಲೀಸ್ ಅಥವಾ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಬೇಕು. ಆ ಮೂಲಕ ಅನಿಷ್ಟ ಪದ್ಧತಿ ನಿಯಂತ್ರಿಸಲು ಕೈಜೋಡಿಸಬೇಕು ಎಂದರು.
ಶಾಲೆಯ ಮಕ್ಕಳು ಪಟ್ಟಣದ ವಿವಿಧ ರಸ್ತೆಗಳಲ್ಲಿ ಜಾಥಾ ನಡೆಸಿ ‘ಬಾಲಕಾರ್ಮಿಕ ಪದ್ಧತಿ’ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮೆಹರ್ ಸುಲ್ತಾನಾ, ದೈಹಿಕ ಶಿಕ್ಷಕ ಚಂದ್ರಯ್ಯ, ವಿಚಕ್ಷಣಾಧಿಕಾರಿ ನಾಗಪ್ಪ, ದೊಳ್ಳಯ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.