ಕೈಲಾಂಚ (ರಾಮನಗರ): ಕೇಂದ್ರ ಸರ್ಕಾರ ಪುರಸ್ಕೃತ ಯೋಜನೆಗಳ ಪರಿಶೀಲನಾ (ಎನ್ಎಲ್ಎಂ)ತಂಡವು ಶ್ರೀನಿವಾಸ್ ನೇತೃತ್ವದಲ್ಲಿ ಇಲ್ಲಿನ ವಿಭೂತಿಕೆರೆ ಗ್ರಾಮ ಪಂಚಾಯಿತಿಗೆ ಶುಕ್ರವಾರ ಭೇಟಿ ನೀಡಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನಮಂತ್ರಿ ಅವಾಜ್ ಯೋಜನೆ, ನರೇಗಾ, ಎನ್ಎಸ್ಎಪಿ, ಎನ್ಆರ್ಎಲ್ಎಂ, ಕೃಷಿ ಸಿಂಚನ, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಶೌಚಾಲಯ ಅನುಷ್ಠಾನ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಫಲಾನುಭವಿಗಳೊಂದಿಗೆ ಮುಕ್ತ ಸಂವಾದ ನಡೆಸಿ ಸಾಧಕ ಬಾಧಕಗಳ ಬಗ್ಗೆ ರೈತರಿಂದ ಮಾಹಿತಿ ಪಡೆದರು.
‘ಪಂಚಾಯಿತಿಗಳು ಯೋಜನೆಗಳನ್ನು ಅನುಷ್ಠಾನಗೊಳಿಸಲು ವಿಫಲವಾಗಿವೆಯೇ ಇಲ್ಲ ಸಮಸ್ಯೆಗಳು ಇವೆಯೇ ಎಂದು ಖುದ್ದಾಗಿ ಪರಿಶೀಲಿಸಿ, ಸಮಸ್ಯೆಗಳ ಬಗ್ಗೆ ತಿಳಿದು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಎನ್.ಎಲ್.ಎಂ ತಂಡದ ಮುಖ್ಯಸ್ಥ ಶ್ರೀನಿವಾಸ್ ಹೇಳಿದರು.
‘ಜಿಲ್ಲೆಯಲ್ಲಿ ನರೇಗಾ ಅನುಷ್ಟಾನ ಮಾಡಿರುವ ಕೆಲಸ ತೃಪ್ತಿ ತಂದಿದೆ. ಆದರೆ ಫಲಾನುಭವಿಗಳಿಗೆ ಕೂಲಿ ಹಣ ಪಾವತಿಸುವ ಸಂದರ್ಭದಲ್ಲಿ ಸರ್ಕಾರದ ಹಂತದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಇದನ್ನು ಸರಿಪಡಿಸಲಾಗುವುದು’ ಎಂದರು.
ತೋಟಗಾರಿಕಾ ಇಲಾಖೆಯ ವತಿಯಿಂದ ತೆಂಗು ಪ್ರದೇಶ ವಿಸ್ತರಣೆ ಯೋಜನೆಯಡಿ ಅನುಷ್ಠಾನಗೊಂಡಿರುವ ಸಿದ್ದಯ್ಯನವರ ತೆಂಗು ನಾಟಿ ವೀಕ್ಷಣೆ ಮತ್ತು ರೇಷ್ಮೆ ಇಲಾಖೆ ವತಿಯಿಂದ ಮೂರು ವರ್ಷಗಳ ನಿರ್ವಹಣೆ ಮಾಡಲಿರುವ ಶಿವಮ್ಮನವರ ರೇಷ್ಮೆ ನಾಟಿ ಪ್ರದೇಶಕ್ಕೆ ಭೇಟಿ ನೀಡಿದರು.
ಇದಕ್ಕೂ ಮುಂಚೆ ಜಿಲ್ಲಾ ಪಂಚಾಯಿತಿಯಲ್ಲಿರುವ ಯೋಜನೆಗಳ ಕಡತ ನಿರ್ವಹಣೆ ಮತ್ತು ಎನ್ಆರ್ಎಲ್ಎಂ ಯೋಜನೆಯಡಿ ಸಾಲ ಪಡೆದಿರುವ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರೊಂದಿಗೆ ಚರ್ಚೆ ನಡೆಸಿದರು.
ಎನ್ಎಲ್ಎಂ ತಂಡದ ರವಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರು, ಮಾಗಡಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ಕುಮಾರ್, ವಿಭೂತಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಮೂರ್ತಿ, ಪಿಡಿಓ ರಂಗೇಗೌಡ, ತೋಟಗಾರಿಕಾ ಇಲಾಖೆ ಅಧಿಕಾರಿ ರಾಮಚಂದ್ರಯ್ಯ, ಅಧಿಕಾರಿ ರಾಮಲಿಂಗಯ್ಯ, ನರೇಗಾ ಎಂಜಿನಿಯರ್ ಕಾರ್ತಿಕ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.