ಚನ್ನಪಟ್ಟಣ: ಮೇರುನಟ ಡಾ. ರಾಜ ಕುಮಾರ್ ಹೆಸರಿನಲ್ಲಿ ಪಟ್ಟಣದಲ್ಲಿ ಬಯಲು ರಂಗಮಂದಿರ ನಿರ್ಮಾಣ ಮಾಡುತ್ತಿರುವುದು ಸ್ವಾಗತಾರ್ಹ ಕ್ರಮ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಪ್ರಶಂಸೆ ವ್ಯಕ್ತಪಡಿಸಿದರು.
ಪಟ್ಟಣದ ಕೊಲ್ಲಾಪುರದಮ್ಮ ದೇವಸ್ಥಾನದ ಆವರಣದಲ್ಲಿ ಸೋಮವಾರ ಡಾ.ರಾಜ್ ಬಯಲು ರಂಗಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕಲಾವಿದರಲ್ಲರೂ ಸೇರಿ ಬಯಲು ರಂಗಮಂದಿರ ನಿರ್ಮಾಣಕ್ಕೆ ಮುಂದಾಗಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದರು.
ಡಾ.ರಾಜ್ ಅವರು ರಂಗಭೂಮಿ, ಚಲನಚಿತ್ರ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪೂರ್ವವಾದುದ್ದು. ಅಂತಹ ಮಹಾನ್ ಕಲಾವಿದನ ಹೆಸರಿನಲ್ಲಿ ರಂಗಮಂದಿರ ನಿರ್ಮಾಣ ಅವರಿಗೆ ನೀಡುವ ಗೌರವ. ಇದನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡಲು ಸರ್ಕಾರದಿಂದ ಅನುದಾನ ತರಲಾಗುವುದು. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅವರು ಹೇಳಿದರು.
ರೈತಸಂಘದ ವಿಭಾಗೀಯ ಉಪಾಧ್ಯಕ್ಷ ಎಂ.ರಾಮು ಮಾತನಾಡಿ, ರಂಗಭೂಮಿ ಕಲಾವಿದರಿಗೆ ತಾಲ್ಲೂಕಿನಲ್ಲಿ ಯಾವುದೇ ಸುಸಜ್ಜಿತ ಸ್ಥಳ ಇಲ್ಲ. ನಾಟಕ ಪ್ರದರ್ಶನಕ್ಕೆ ಈ ಜಾಗ ಬಳಸಿಕೊಳ್ಳಲಾಗುತ್ತಿತ್ತು ಎಂದು ಹೇಳಿದರು.
ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ಡಾ.ರಾಜ್ ರಂಗಕಲೆ ಹಾಗೂ ಚಿತ್ರೋದ್ಯಮಕ್ಕೆ ನೀಡಿರುವ ಕೊಡುಗೆ ಅನನ್ಯ ಎಂದರು.
ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸಿಂ.ಲಿಂ.ನಾಗರಾಜು, ಡಾ.ರಾಜ್ ಕಲಾಬಳಗದ ಮಂಜುನಾಥ್, ಕಲಾವಿದರಾದ ಕೂಡ್ಲೂರು ವೆಂಕಟೇಶ್, ಎಲೇಕೇರಿ ರವೀಶ್, ನಗರಸಭೆ ಸದಸ್ಯ ಉಮಾಶಂಕರ್, ರಾಜೇಶ್, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.