ADVERTISEMENT

‘ಜೆಡಿಎಸ್ ಗೆದ್ದರೆ ರೈತರ ಸಾಲ ಮನ್ನಾ’

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2017, 6:22 IST
Last Updated 16 ಡಿಸೆಂಬರ್ 2017, 6:22 IST

ಅರಳಾಳುಸಂದ್ರ (ಚನ್ನಪಟ್ಟಣ): ರೈತರು ಸಾಲ ಮನ್ನಾ ಆಗುತ್ತದೆ ಎಂದು ನಿರೀಕ್ಷೆ ಇಟ್ಟುಕೊಳ್ಳದೆ ಪಡೆದ ಸಾಲದ ಹಣ ಸದ್ಬಳಕೆ ಮಾಡಿಕೊಂಡು ಜೀವನದಲ್ಲಿ ಪ್ರಗತಿ ಸಾಧಿಸುವಂತೆ ವಿಧಾನ ಪರಿಷತ್ ಸದಸ್ಯ ಎಸ್.ರವಿ ಕಿವಿಮಾತು ಹೇಳಿದರು.

ಗ್ರಾಮದಲ್ಲಿ ನಿರ್ಮಾಣವಾಗಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಮಾತನಾಡಿ, ರಾಜ್ಯಸರ್ಕಾರವು ರೈತರ ₹8800 ಕೋಟಿ ಸಾಲವನ್ನು ಮನ್ನಾ ಮಾಡಿದೆ. ಇದೀಗ ಸಾಲ ಮನ್ನಾ ಅಗಿರುವ ರೈತರಿಗೆ ಮತ್ತೆ ಸಾಲವನ್ನು ನೀಡುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು
ಎಂದರು.

ಖಾಸಗಿ ಫೈನಾನ್ಸ್ ಕಂಪೆನಿಗಳ ಹಿಡಿತದಿಂದ ಕಾಪಾಡುವ ನಿಟ್ಟಿನಲ್ಲಿ ಸರ್ಕಾರವು ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣೆ ಮಾಡುತ್ತಿದೆ. ಸಾಲ ಪಡೆದ ಫಲಾನುಭವಿಗಳು ಸಕಾಲಕ್ಕೆ ಸಾಲವನ್ನು ಮರುಪಾವತಿಸಿ ಮತ್ತಷ್ಟು ಅರ್ಹರಿಗೆ ಸಾಲ ನೀಡಲು ಸಹಕಾರ ನೀಡಬೇಕು ಎಂದರು.

ADVERTISEMENT

ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಮಾತನಾಡಿ, ಗ್ರಾಮೀಣ ಪ್ರದೇಶದ ಅರ್ಥಿಕ ಅಭಿವೃದ್ಧಿಗೆ ಸಹಕಾರ ಸಂಘಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ರೈತರ ಎಲ್ಲಾ ಸಾಲ ಮನ್ನಾ ಮಾಡುವ ಜೊತೆಗೆ ರೈತರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದ್ದಾರೆ ಎಂದರು.

ರಾಜ್ಯ ರೈತಸಂಘದ ಉಪಾಧ್ಯಕ್ಷೆ ಅನಸೂಯಮ್ಮ ಮಾತನಾಡಿ, ಇಂದು ಗಾಮೀಣ ಪ್ರದೇಶದ ಪ್ರತಿಮನೆಗಳಲ್ಲಿ ಕುಟಂಬ ನಿರ್ವಹಣೆ ಮಾಡುತ್ತಿರುವುದು ಸ್ತ್ರೀಶಕ್ತಿ ಸಂಘಗಳಿಂದ ಪಡೆಯುತ್ತಿರುವ ಸಾಲಗಳಿಂದ ಎಂದರೆ ತಪ್ಪಾಗಲಾರದು. ಇತ್ತೀಚಿನ ದಿನಗಳಲ್ಲಿ ಸಹಕಾರ ಕ್ಷೇತ್ರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸಹಕಾರ ಸಂಘಗಳು ಸಹಕಾರ ತತ್ವದಡಿ ನಡೆದಾಗ ಮಾತ್ರ ಗ್ರಾಮೀಣ ಪ್ರದೇಶದಲ್ಲಿ ನಿಜವಾದ ಪ್ರಯೋಜನ ಸಿಗುತ್ತದೆ. ಈ ನಿಟ್ಟಿನಲ್ಲಿ ಸಹಕಾರ ಸಂಘಗಳು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಸಂಘದ ಅಧ್ಯಕ್ಷ ಎಂ.ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರವೀಶಯ್ಯ, ನಿರ್ದೇಶಕ ಎಸ್.ಲಿಂಗೇಶ್ ಕುಮಾರ್, ಜಿಲ್ಲಾ ಸಹಕಾರಿ ಒಕ್ಕೂಟದ ಉಪಾಧ್ಯಕ್ಷ ಸಿಂ.ಲಿಂ.ನಾಗರಾಜು ಮಾತನಾಡಿದರು.

ನಿವೇಶನ ದಾನಿ ಗೌರಮ್ಮ ಸಿದ್ದಪ್ಪ, ಹಿರಿಯ ಸಹಕಾರಿ ಧುರೀಣರಾದ ಚನ್ನಿಗನಹೊಸಹಳ್ಳಿ ಟಿ.ಮಂಚೇಗೌಡ, ವಿಠಲೇನಹಳ್ಳಿ ವಿ.ಪುಟ್ಟಪ್ಪ, ರಾಜ್ಯ ಸಹಕಾರ ಕುಕ್ಕಟ ನಿಗಮದ ಅಧ್ಯಕ್ಷ ಡಿ.ಕೆ.ಕಾಂತರಾಜು ಅವರನ್ನು ಸನ್ಮಾನಿಸಲಾಯಿತು.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಚ್.ಸಿ.ಜಯಮುತ್ತು, ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಸನ್ನಕುಮಾರ್, ಬಿ.ವಿ.ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನುತ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಿಂಗರಾಜೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಸೀನಪ್ಪ, ಜಿಲ್ಲಾ ಸಹಕಾರಿ ಒಕ್ಕೂಟದ ನಿರ್ದೇಶಕ ಬಿ.ಟಿ.ನಾಗೇಶ್, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ಸಿ.ವೀರೇಗೌಡ, ಮುಖಂಡ ಶರತ್ ಚಂದ್ರ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಬಿ.ಇ. ನಂದೀಶ್ ಕುಮಾರ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಎನ್.ಸಾಗರ್, ಶಿಕ್ಷಕ ಸುರೇಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.