ADVERTISEMENT

ಜ.3ರಂದು ಬೆಂಗಳೂರಿನಲ್ಲಿ ರೈತರ ಸಮಾವೇಶ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2017, 4:53 IST
Last Updated 18 ಡಿಸೆಂಬರ್ 2017, 4:53 IST

ಕುದೂರು (ಮಾಗಡಿ): ಮುಂದಿನ ಜನವರಿ 3ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರೈತರ ಬೃಹತ್‌ ಸಮಾವೇಶ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದರು. ಭಾನುವಾರ ಕುದೂರಿನಲ್ಲಿ ನಡೆದ ರೈತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಸರ್ಕಾರವು ಹಾಲು ಉತ್ಪಾದಕರ ಬದಲಿಗೆ ಗ್ರಾಹಕರಿಗೆ ಸಹಾಯಧನ ನೀಡಲಿ. ರೈತರು ಉತ್ಪಾದಿಸುವ ಪ್ರತಿಯೊಂದು ವಸ್ತುವಿಗೂ ಉತ್ಪಾದನಾ ವೆಚ್ಚ ಆಧರಿಸಿ ಬೆಲೆ ನೀಡಬೇಕು. ನಾಲ್ಕನೇ ದರ್ಜೆ ನೌಕರನಿಗೆ ಕೊಡುವ ಸಂಬಳ ನೋಡಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರನ್ನು ಗುಲಾಮರಂತೆ ನೋಡುವುದು ಸ್ಪಷ್ಟವಾಗುತ್ತದೆ. ಉದ್ಯಮಿಗಳ ಸಾವಿರಾರು ಕೋಟಿ ಸಾಲಮನ್ನಾ ಮಾಡುವ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡುವ ಬಗ್ಗೆ ತುಟಿ ಬಿಚ್ಚುವುದಿಲ್ಲ ಎಂದರು.

ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಮಹದಾಯಿ ನದಿ ನೀರಿನ ಬಗ್ಗೆ ಹೋರಾಟ ಮಾಡುತ್ತಿರುವ ಅನ್ನದಾತನತ್ತ ಗಮನ ಹರಿಸುತ್ತಿಲ್ಲ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಈ ಮೂರೂ ಪಕ್ಷಗಳು ರೈತರ ಬಗ್ಗೆ ಕಿಂಚಿತ್ತೂ ಗಮನಿಸುತ್ತಿಲ್ಲ. ರೈತರು ನಿತ್ಯ ‘ಪ್ರಜಾವಾಣಿ’ ಪತ್ರಿಕೆ ಓದಿಕೊಂಡು ಸರ್ಕಾರಗಳು ಮಾಡುತ್ತಿರುವ ಅವ್ಯವಹಾರಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ರೈತರ ಹಿತಾಸಕ್ತಿಯನ್ನು ಕಡೆಗಣಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ರೈತರು ಜಾಗೃತರಾಗಿ ತಕ್ಕ ಪಾಠ ಕಲಿಸಬೇಕು ಎಂದು ತಿಳಿಸಿದರು.

ADVERTISEMENT

ಗದ್ದುಗೆ ಮಠದ ಮಹಂತಸ್ವಾಮಿ, ಅನ್ನದಾನೇಶ್ವರಸ್ವಾಮಿ, ರೈತ ಸಂಘದ ಅಧ್ಯಕ್ಷ ಗೋವಿಂದರಾಜು, ರೈತ ಮುಖಂಡರಾದ ಭೈರೇಗೌಡ, ಲಕ್ಷ್ಮಣಸ್ವಾಮಿ, ಮಂಜುನಾಥ್‌, ಗ್ರಾಮಪಂಚಾಯಿತಿ ಅಧ್ಯಕ್ಷ ರಾಘವೇಂದ್ರ ರೈತರ ಸಮಸ್ಯೆಗಳನ್ನು ಕುರಿತು ಮಾತನಾಡಿದರು. ರೈತರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.