ADVERTISEMENT

ಲಂಬಾಣಿ ಬಾಲಕಿಯರ ಮಾರಾಟ: ಆತಂಕ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2012, 19:30 IST
Last Updated 25 ಫೆಬ್ರುವರಿ 2012, 19:30 IST

ರಾಮನಗರ : ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಪಕ್ಷಗಳು ಲಂಬಾಣಿ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸುತ್ತಿಲ್ಲ ಎಂದು ಕರ್ನಾಟಕ ಪ್ರದೇಶ ಲಂಬಾಣಿ ಬಂಜಾರ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಕೃಷ್ಣಾನಾಯಕ್ ದೂರಿದರು.

ನಗರದ ಸ್ಫೂರ್ತಿ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿಗೂ ಸಹ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಕ್ಕಳ ಮಾರಾಟ ಪ್ರಕರಣಗಳು ನಡೆಯುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಹಿಂದೆ ರಾಯಚೂರಿನಲ್ಲಿ ಮೂರು ತಿಂಗಳ ಹಸುಗೂಸಿನ ಮಾರಾಟ ನಡೆದಿತ್ತು.

ಈ ಪ್ರಕರಣದಲ್ಲಿ ತೆಲುಗಿನ ಖ್ಯಾತ ನಟರೊಬ್ಬರು ಶಾಮೀಲಾಗಿದ್ದರು. ಆದರೆ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ ಪ್ರಕರಣವನ್ನು ಮುಚ್ಚಿ ಹಾಕಿದರು ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಲಂಬಾಣಿ ಜನಾಂಗದ 12-14ರ ವಯಸ್ಸಿನ ಹೆಣ್ಣು ಮಕ್ಕಳನ್ನು ಬಡತನದ ನೆಪವನ್ನಿಟ್ಟುಕೊಂಡು ವೇಶ್ಯಾವಾಟಿಕೆಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರದ ಅಂಕಿ ಅಂಶದ ಪ್ರಕಾರ ವರ್ಷಕ್ಕೆ 6 ಸಾವಿರ ಅಪ್ರಾಪ್ತ ವಯಸ್ಸಿನ ಯುವತಿಯರ ಮಾರಾಟವಾಗುತ್ತಿದೆ.

ಇದರಲ್ಲಿ ಬಹುತೇಕ ಅಪ್ರಾಪ್ತ ಯುವತಿಯರು ಲಂಬಾಣಿ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಸರ್ಕಾರ ಈ ಪ್ರಕರಣಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ ಅಪರಾಧಿಗಳನ್ನು ಶಿಕ್ಷಿಸಬೇಕು ಎಂದು ಅವರು ಒತ್ತಾಯಿಸಿದರು.
ವಯೋವೃದ್ಧರ ಜೊತೆ ಅಪ್ರಾಪ್ತ ವಯಸ್ಸಿನ ಲಂಬಾಣಿ ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಡಲಾಗುತ್ತಿದೆ. ಅಲ್ಲದೆ ಕೂಲಿಗಾಗಿ ಲಂಬಾಣಿಗರು ಹೊರ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದು ಅವರು ದೂರಿದರು.

ಕರ್ನಾಟಕ ಪ್ರದೇಶ ಲಂಬಾಣಿ ಬಂಜಾರ ಕಲ್ಯಾಣ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮನಾಯಕ್, ರಾಜ್ಯ ಜಂಟಿ ಕಾರ್ಯದರ್ಶಿ ಜಿ.ಕೃಷ್ಣಾನಾಯಕ್, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಇಂದಿರಾಬಾಯಿ, ತುಮಕೂರಿನ ಜಿಲ್ಲಾಧ್ಯಕ್ಷ ದೇನಾ ನಾಯಕ್, ರಾಮನಗರ ಜಿಲ್ಲಾಧ್ಯಕ್ಷ ಚಂದ್ರಾನಾಯಕ್, ಕಾರ್ಯಾಧ್ಯಕ್ಷ ಹನುಮಂತನಾಯಕ್, ಖಜಾಂಚಿ ಚಂದ್ರಾನಾಯಕ್, ಸಂಘಟನಾ ಕಾರ್ಯದರ್ಶಿ ಶಂಕರನಾಯಣ್ ಉಪಸ್ಥಿತರಿದ್ದರು.

26ರಿಂದ ಅಷ್ಟಬಂಧ 
ಕನಕಪುರ:ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಫೆಬ್ರುವರಿ 26 ಮತ್ತು27 ರಂದು ಕಾಳಿಕಾಂಬ ದೇವಾಲಯದಲ್ಲಿ  ಸಿದ್ದಪ್ಪಾಜಿ ಸ್ವಾಮಿಯ ಪುನರ್ ಅಷ್ಟಬಂಧನ ಮಹೋತ್ಸವ ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಪಿ.ತ್ಯಾಗರಾಜಮೂರ್ತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.