ADVERTISEMENT

ಲೋಕಾಯುಕ್ತ ನೇಮಕ ಮತ್ತು ಹೈ.ಕ.ವಿಶೇಷ ಸ್ಥಾನಮಾನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಜನವರಿ 2012, 19:30 IST
Last Updated 30 ಜನವರಿ 2012, 19:30 IST
ಲೋಕಾಯುಕ್ತ ನೇಮಕ ಮತ್ತು ಹೈ.ಕ.ವಿಶೇಷ ಸ್ಥಾನಮಾನಕ್ಕೆ ಆಗ್ರಹ
ಲೋಕಾಯುಕ್ತ ನೇಮಕ ಮತ್ತು ಹೈ.ಕ.ವಿಶೇಷ ಸ್ಥಾನಮಾನಕ್ಕೆ ಆಗ್ರಹ   

ರಾಮನಗರ: ಲೋಕಾಯುಕ್ತರ ನೇಮಕ ಹಾಗೂ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಸೋಮವಾರ ರಾಮನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಐಜೂರು ವೃತ್ತದ ಮೂಲಕ ಪಾದಯಾತ್ರೆಯಲ್ಲಿ ಸಾಗಿದ ಸಂಘಟನೆಯ ಕಾರ್ಯಕರ್ತರು ಮಿನಿ ವಿಧಾನಸೌಧದ ಮುಂಭಾಗ ಧರಣಿ ನಡೆಸಿದರು.

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಗೆ ತನ್ನದೇ ಆದ ಗೌರವಯುತ ಸ್ಥಾನ ಇದೆ. ಹಿಂದಿನ ಲೋಕಾಯುಕ್ತರಾದ ವೆಂಕಟಾಚಲಯ್ಯ, ಸಂತೋಷ್ ಹೆಗ್ಡೆ ಅವರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇಂದಿನ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ವೈಮನಸ್ಯದಿಂದ ಹೊಸ ಲೋಕಾಯುಕ್ತರ ನೇಮಕಾತಿ ವಿಳಂಬವಾಗುತ್ತಿರುವುದು ಖಂಡನೀಯ.

ಕೂಡಲೇ ಲೋಕಾಯುಕ್ತರನ್ನು ನೇಮಿಸಬೇಕು ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಡಿ.ಜಿ.ಕುಮಾರ್ ದೂರಿದರು.
ಫೆಬ್ರುವರಿ 20ರೊಳಗೆ ಹೊಸ ಲೋಕಾಯುಕ್ತರ ನೇಮಕ ಆಗದಿದ್ದಲ್ಲಿ ರಾಜ್ಯದಾದ್ಯಂತ ಜಯ ಕರ್ನಾಟಕ ಸಂಘಟನೆ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ಹೈದರಾಬಾದ್ ಕರ್ನಾಟಕದ ಐದು ಜಿಲ್ಲೆಗಳಾದ ಗುಲ್ಬರ್ಗಾ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಅನ್ವಯವಾಗುವಂತೆ 371ನೇ ಕಲಂ ಅನ್ವಯ ಸಂವಿಧಾನಕ್ಕೆ ತಿದ್ದುಪಡಿ ತಂದು ಈ ಭಾಗಕ್ಕೆ ವಿಶೇಷ ಸ್ಥಾನ ಕಲ್ಪಿಸಬೇಕೆಂದು ಅವರು  ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಕೃಷ್ಣಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಉಮಾ ಮಂಜಪ್ಪ, ಗೌರವ ಸಲಹೆಗಾರ ಕೆ.ವಿ.ರಮೇಶ್, ಮಾಗಡಿ ತಾಲ್ಲೂಕು ಅಧ್ಯಕ್ಷ ಡಿ.ಎಸ್. ನಾಗರಾಜ್, ತಾಲ್ಲೂಕು ಗೌರವ ಅಧ್ಯಕ್ಷ ಎಂ.ಸಿ.ರಂಗಸ್ವಾಮಿ, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅತಾವುಲ್ಲಾ ಖಾನ್, ಉಪಾಧ್ಯಕ್ಷ ಸಮದ್, ಪ್ರಧಾನ ಕಾರ್ಯದರ್ಶಿ ಆರಿಫ್ ಪಾಷಾ, ಇರ್ಷಾದ್, ಕನಕಪುರ ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಜಿಲ್ಲಾ ಉಪಾಧ್ಯಕ್ಷ ಸೋಮಸುಂದರ್, ಪಿಚ್ಚನಕೆರೆ ಜಗದೀಶ್ ಮತ್ತಿತರರು ಭಾಗವಹಿಸಿದ್ದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅರ್ಚನಾ ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.