ADVERTISEMENT

ಶಾಲಾ ಶೈಕ್ಷಣಿಕ ಸವಲತ್ತು ಸದ್ಬಳಕೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2011, 19:30 IST
Last Updated 1 ಅಕ್ಟೋಬರ್ 2011, 19:30 IST

ದೇವನಹಳ್ಳಿ: `ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಹಲವಾರು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆದ್ದು, ಸೂಕ್ತ ರೀತಿಯಲ್ಲಿ ಸದ್ಬಳಕೆಯಾಗಬೇಕು~ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎಂ.ಬೀರಪ್ಪ ತಿಳಿಸಿದರು.
ತಾಲ್ಲೂಕಿನ ಕೊಯಿರಾ ಪ್ರೌಢಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ 2011-12 ನೇ ಸಾಲಿನ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

`ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ಜ್ಞಾನಾರ್ಜನೆಯಲ್ಲಿ ಪ್ರಮುಖ ಪಾತ್ರವಹಿಸಲಿದೆ. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂಬುದನ್ನು ಅರಿತು ಶ್ರದ್ಧೆಯಿಂದ ವಿದ್ಯಾಬ್ಯಾಸ ಮಾಡಬೇಕು ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.

ಶಾಲೆಯ ಸುತ್ತ ಕಾಂಪೌಂಡ್ ನಿರ್ಮಿಸಲು ಜಿಲ್ಲಾ ಪಂಚಾಯಿತಿವತಿಯಿಂದ ಐದು ಲಕ್ಷ ರೂ ನೀಡುವುದಾಗಿ ಅವರು ಭರವಸೆ ನೀಡಿದರು.ತಾಲ್ಲೂಕು ಖಾದಿಬೋರ್ಡ್ ಮಾಜಿ ಅಧ್ಯಕ್ಷ ಹೆಚ್.ಎಂ.ರವಿಕುಮಾರ್ ಮಾತನಾಡಿ, ` ಸಕಾಲದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬರಲಿ ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಸರ್ಕಾರ ಸೈಕಲ್ ನೀಡುತ್ತಿದೆ.

ಸಮಯಪಾಲನೆ ಮುಖ್ಯ ಅಂಶವಾದರೂ ಗ್ರಾಮೀಣ ವಿದ್ಯಾರ್ಥಿಗಳು ಬಲಿಷ್ಠರು ಮತ್ತು ಬುದ್ದಿವಂತರು ಆದರೆ ಕಲಿಕೆಯಲ್ಲಿ ಶಿಸ್ತು ಅಳವಡಿಸಿಕೊಳ್ಳಬೇಕು. ಸಾಮಾನ್ಯ ಜ್ಞಾನ ದೇಶಿ ಸಂಸ್ಕೃತಿ ನಾಡಿನ ಪರಂಪರೆ, ಅರ್ಥೈಸುವ ಕೆಲಸ ಶಿಕ್ಷಕರು ಮಾಡಬೇಕು ಎಂದು ತಿಳಿಸಿದರು.

ಕೊಯಿರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ ಮೂರ್ತಿ ಮಾತನಾಡಿ, `ಕಳೆದ ಸಾಲಿನ 10 ನೇ ತರಗತಿ ಫಲಿತಾಂಶದಲ್ಲಿ ತಾಲ್ಲೂಕಿನ ಕೊಯಿರಾ ಶಾಲೆ ಪ್ರಥಮ ಸ್ಥಾನದಲ್ಲಿದೆ. ಹೆಚ್ಚುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಗೆ ವಿದ್ಯಾರ್ಥಿನಿಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಮುಂದಿನ ವರ್ಷದಿಂದ ಸೌಲಭ್ಯ ಜಾರಿಯಾಗಲಿದೆ ಎಂದರು.

ಮುಖ್ಯ ಶಿಕ್ಷಕ ಶ್ರೀನಿವಾಸ ಮೂರ್ತಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಸಿ.ಮುನಿರಾಜು, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶ್ರಿನಿವಾಸ್, ಎಂ.ಪಿ.ಸಿ.ಎಸ್ ಸದಸ್ಯ ಚೆನ್ನಕೇಶವ, ಹನುಮೇಗೌಡ, ಗ್ರಾ.ಪಂ ಸದಸ್ಯ ಕೆ.ಎನ್.ಬಾಬು ಇದ್ದರು ಶಿಕ್ಷಕಿ ನಜ್ಮಾಬಾನು ನಿರೂಪಿಸಿದರು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.