ADVERTISEMENT

‘ಸ್ವಂತ ಬಲದಿಂದ ಜೆಡಿಎಸ್‌ ಅಧಿಕಾರಕ್ಕೆ’

ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ದಂಪತಿಯಿಂದ ಮತದಾನ

​ಪ್ರಜಾವಾಣಿ ವಾರ್ತೆ
Published 13 ಮೇ 2018, 9:18 IST
Last Updated 13 ಮೇ 2018, 9:18 IST
ಕೇತಗಾನಹಳ್ಳಿಯಲ್ಲಿ ಮತ ಚಲಾವಣೆಯ ಬಳಿಕ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಅನಿತಾ ಶಾಹಿ ಗುರುತು ಪ್ರದರ್ಶಿಸಿದರು
ಕೇತಗಾನಹಳ್ಳಿಯಲ್ಲಿ ಮತ ಚಲಾವಣೆಯ ಬಳಿಕ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಅನಿತಾ ಶಾಹಿ ಗುರುತು ಪ್ರದರ್ಶಿಸಿದರು   

ರಾಮನಗರ: ‘ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದು ನಿಶ್ಚಿತ. ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಉದ್ಬವಿಸುವ ಪ್ರಶ್ನೆಯೇ ಇಲ್ಲ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಶನಿವಾರ ಮತದಾನ ಮಾಡಿದ ಸಂದರ್ಭ
ದಲ್ಲಿ ಅವರು ಪತ್ರಕರ್ತರ ಜೊತೆಗೆ ಮಾತನಾಡಿದರು.

‘ನಾಲ್ಕು ತಿಂಗಳಿನಿಂದ ರಾಜ್ಯದಾದ್ಯಂತ ಪ್ರವಾಸ ಮಾಡಿ ನಾಡಿನ ಜನರ ಭಾವನೆ ಅರ್ಥಮಾಡಿಕೊಂಡಿದ್ದೇನೆ. ರಾಷ್ಟ್ರೀಯ ಪಕ್ಷಗಳು ಹೊರ ರಾಜ್ಯಗಳಿಂದ ನಾಯಕರನ್ನು ಕರೆತಂದು ಭಾಷಣ ಮಾಡಿಸಿದರೂ ಜನರ ಒಲವು ಜೆಡಿಎಸ್ ಕಡೆಗೆ ಇದೆ. ಅದರಲ್ಲೂ ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಿದ್ದಾರೆ’ ಎಂದರು.

ADVERTISEMENT

‘ಈ ಬಾರಿ ಯಾವುದೇ ಕಾರಣಕ್ಕೂ ಬಿಜೆಪಿ, ಕಾಂಗ್ರೆಸ್ ಜೊತೆ ಕೈ ಜೋಡಿಸುವುದಿಲ್ಲ. ಯಾರ ಮನೆಯ ಬಾಗಿಲಿಗೂ ನಾನು ಹೋಗುವುದಿಲ್ಲ. ಅವರೂ ನನ್ನ ಮನೆ ಬಾಗಿಲಿಗೆ ಬರುವುದು ಬೇಡ’ ಎಂದರು.

‘ಉತ್ತರ ಕರ್ನಾಟಕ ಭಾಗದಲ್ಲಿಯೂ ಪಕ್ಷವು ಕನಿಷ್ಠ 26–32 ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ಮುಂದೂಡಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದಕ್ಕಾಗಿ ಸೂಕ್ತ ತಯಾರಿ ಮಾಡಿಕೊಳ್ಳುವುದಾಗಿ ತಿಳಿಸಿದರು.

ಎರಡೂ ಕಡೆ ಗೆಲುವು: ಚನ್ನಪಟ್ಟಣ ಹಾಗೂ ರಾಮನಗರ ಕ್ಷೇತ್ರಗಳು ನನ್ನ ಎರಡು ಕಣ್ಣು ಇದ್ದ ಹಾಗೆ. ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇನೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

‘ಮುಂದಿನ ದಿನಗಳಲ್ಲಿ ನಮ್ಮದೇ ಸರ್ಕಾರ ರಚನೆಯಾಗುವ ವಿಶ್ವಾಸವಿದೆ. ಎರಡು ಕಡೆ ನಾನೇ ಪ್ರತಿನಿಧಿಯಾಗಿದ್ದುಕೊಂಡು ಸಮಗ್ರ ಅಭಿವೃದ್ಧಿ ಪಡಿಸುತ್ತೇನೆ. ಕುಮಾರಸ್ವಾಮಿ ಕೆರೆ–ಕಟ್ಟೆಗಳನ್ನು ತುಂಬಿಸಲಿಲ್ಲ ಎಂದು ಕೆಲವರು ಆರೋಪ ಮಾಡುತ್ತಾರೆ. ಇವತ್ತು ಕಾವೇರಿ ನೀರು ಹಂಚಿಕೆ ತೀರ್ಪಿನ ಹಿನ್ನೆಲೆಯಲ್ಲಿ ಯಾವ ರೀತಿ ನೀರು ತರಬೇಕು. ಶುದ್ಧ ನೀರು ಘಟಕಗಳನ್ನು ಸ್ಥಾಪಿಸಬೇಕು. ಯುವಕರಿಗೆ ಉದ್ಯೋಗ ಒದಗಿಸಬೇಕು. ಪ್ರಣಾಳಿಕೆಯಲ್ಲಿ ಘೋಷಿಸಿದ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದು ಯೋಜಿಸಿದ್ದೇನೆ’ ಎಂದರು.

ಎರಡೂ ಕ್ಷೇತ್ರದಲ್ಲಿ ಗೆದ್ದರೆ ಸಂವಿಧಾನತ್ಮಕವಾಗಿ ಯಾವ ಕ್ಷೇತ್ರ ಉಳಿಸಿಕೊಳ್ಳುತ್ತೀರಿ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡದ ಅವರು ‘ರಾಜ್ಯದ 224 ಕ್ಷೇತ್ರಗಳನ್ನೂ ಉಳಿಸಿಕೊಳ್ಳುತ್ತೇನೆ’ ಎಂದು ಜಾರಿಕೊಂಡರು.

‘ಕಾಂಗ್ರೆಸ್‌ ಹಾಗೂ ಬಿಜೆಪಿ ಮುಖಂಡರು ಜೆಡಿಎಸ್‌ನ ಪ್ರಣಾಳಿಕೆ ನೋಡಿ ಈಗಾಗಲೇ ಸುಸ್ತಾಗಿದ್ದಾರೆ. ನನ್ನ ಪ್ರೀತಿ ಮತ್ತು ಸರಳತೆಯೇ ಗೆಲುವಿಗೆ ಪ್ರಮುಖ ಕಾರಣವಾಗಲಿದೆ’ ಎಂದರು.

ಮಾಗಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್‌ ಬಿಡದಿಯಲ್ಲಿ ಮತದಾನ ಮಾಡಿದರು.

**
ರಾಮನಗರ, -ಚನ್ನಪಟ್ಟಣ ಎರಡೂ ಕ್ಷೇತ್ರದಲ್ಲೂ ನಾನೇ ಗೆಲ್ಲುತ್ತೇನೆ. ಬಂಡಾಯ ಶಾಸಕರ ಏಳೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ
– ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.