ADVERTISEMENT

‘ಹೈಕಮಾಂಡ್ ಆದೇಶದ ಮೇರೆಗೆ ಸ್ವರ್ಧೆ’

ಚನ್ನಪಟ್ಟಣ: ಕಾಂಗ್ರೆಸ್ ಅಭ್ಯರ್ಥಿ ಸಚಿವ ಎಚ್.ಎಂ.ರೇವಣ್ಣ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 11:18 IST
Last Updated 21 ಏಪ್ರಿಲ್ 2018, 11:18 IST

ಚನ್ನಪಟ್ಟಣ: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಪಕ್ಷದ ಕಚೇರಿಯಿಂದ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ಮಧ್ಯಾಹ್ನ 2.45ಕ್ಕೆ ಆಗಮಿಸಿದ ರೇವಣ್ಣ, ಚುನಾವಣಾಧಿಕಾರಿ ಕಚೇರಿಗೆ ತೆರಳಿ ಎರಡು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಡಿ.ಕೆ.ಸುರೇಶ್, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಗಂಗಾಧರ್, ರೇವಣ್ಣ ಧರ್ಮಪತ್ನಿ ವತ್ಸಲಾ, ಪುತ್ರರಾದ ಅನೂಪ್, ಶಶಾಂಕ್ ಇದ್ದರು.

ಇದಕ್ಕೂ ಮುನ್ನ ಪಟ್ಟಣದ ಸ್ಪನ್ ಸಿಲ್ಕ್ ಮಿಲ್ ಬಳಿಯಿಂದ ರೇವಣ್ಣ ಅವರು ಮೆರವಣಿಗೆ ನಡೆಸಿದರು. ಪಕ್ಷದ ಕಾರ್ಯಕರ್ತರು ಬಾವುಟ ಹಿಡಿದು ಜೈಕಾರ ಹಾಕುತ್ತಾ ಸಾಗಿದರು.

ADVERTISEMENT

ಎರಡು ಪಕ್ಷಗಳ ಕಾರ್ಯಕರ್ತರ ಸಮಾಗಮ: ಎಚ್.ಡಿ.ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿ ಹೊರ ಹೋಗುತ್ತಿದ್ದಂತೆಯೇ ಕಾಂಗ್ರೆಸ್ ಅಭ್ಯರ್ಥಿ ಎಚ್.ಎಂ.ರೇವಣ್ಣ ಅವರು ನಾಮಪತ್ರ ಸಲ್ಲಿಸಲು ತಾಲ್ಲೂಕು ಕಚೇರಿಗೆ ಬಂದ ವೇಳೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾಗಮವಾಯಿತು. ಈ ಸಂದರ್ಭದಲ್ಲಿ ರೇವಣ್ಣ ಜೊತೆ ಮೆರವಣಿಗೆ ಮೂಲಕ ಬಂದ ಕಾಂಗ್ರೆಸ್ ಕಾರ್ಯಕರ್ತರು ರೇವಣ್ಣ ಪರ ಘೋಷಣೆ ಕೂಗಿದರೆ, ಅಲ್ಲೇ ಇದ್ದ ಜೆಡಿಎಸ್ ಕಾರ್ಯಕರ್ತರು ಕುಮಾರಸ್ವಾಮಿ ಪರ ಘೋಷಣೆ ಕೂಗಿದರು.

ಎರಡೂ ಪಕ್ಷಗಳ ಕಾರ್ಯಕರ್ತರು ಒಟ್ಟಿಗೆ ಸೇರಿದ್ದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ವಾಹನಗಳು ನಿಂತಲ್ಲೇ ನಿಂತು ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.

ರೇವಣ್ಣ ನಾಮಪತ್ರ ಸಲ್ಲಿಸುವುದಕ್ಕೂ ಮೊದಲು ತಾಲ್ಲೂಕಿನ ಹುಣಸನಹಳ್ಳಿ ಬಿಸಲಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಅರೆಸೇನಾಪಡೆ ತುಕಡಿ ಹಾಗೂ ಸ್ಥಳೀಯ ಪೊಲೀಸರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.

ಗೆಲುವು ಖಚಿತ: ರೇವಣ್ಣ

‘ನಾಮಪತ್ರ ಸಲ್ಲಿಸಿ ನಂತರ ಹೊರಬಂದು ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ ಅವರು, ಪಕ್ಷದ ಹೈಕಮಾಂಡ್ ಆದೇಶದ ಮೇರೆಗೆ ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೇನೆ. ನಾನು ಇದೇ ಜಿಲ್ಲೆಯವನು, ರಾಜ್ಯ ಸರ್ಕಾರ ಮಾಡಿರುವ ಸಾಧನೆಗಳ ಆಧಾರದ ಮೇಲೆ ನಾನು ಗೆಲ್ಲುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.