ADVERTISEMENT

ಹೊಗೇನಕಲ್: ಸ್ಪಷ್ಟ ನಿಲುವಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2011, 19:30 IST
Last Updated 19 ಅಕ್ಟೋಬರ್ 2011, 19:30 IST

ರಾಮನಗರ: ಹೊಗೇನಕಲ್ ವಿಚಾರದಲ್ಲಿ ಸ್ಪಷ್ಟ ನಿಲುವ ಪ್ರಕಟಿಸದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ರಾಜ್ಯ ಸರ್ಕಾರ ಗುರುವಾರ ಅದ್ಧೂರಿ ಸ್ವಾಗತ ನೀಡಲು ನಿರ್ಧರಿಸಿರುವುದು ಸೂಕ್ತವಲ್ಲ ಎಂದು ಕರ್ನಾಟಕ ನವನಿರ್ಮಾಣ ಸೇನೆ ದೂರಿದೆ.

`ಕಾವೇರಿ ವಿಚಾರದಲ್ಲಿ ಕರ್ನಾಟಕದೊಂದಿಗೆ ಉತ್ತಮ ಬಾಂದವ್ಯ ಹೊಂದಿರದ ತಮಿಳುನಾಡು ಮುಖ್ಯಮಂತ್ರಿಗೆ ಭವ್ಯ ಸ್ವಾಗತ ನೀಡುವ ಅಗತ್ಯವಾದರೂ ಏನಿದೆ~ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ್ ಮಂಗಳವಾರ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಹೊಗೇನಕಲ್‌ನಲ್ಲಿ ತರಾತುರಿಯಲ್ಲಿ ಕಾಮಗಾರಿ ಮುಗಿಸಿ ಅದನ್ನು ಉದ್ಘಾಟಿಸಲು ತಮಿಳುನಾಡು ಸರ್ಕಾರ ತುದಿಗಾಲಲ್ಲಿ ನಿಂತಿದೆ. ಆದರೆ ಈ ಕಾಮಗಾರಿಯ ಉದ್ಘಾಟನೆಗೆ ನಮ್ಮ ಸಂಘಟನೆಯ ಕಾರ್ಯಕರ್ತರು ಬಿಡುವುದಿಲ್ಲ. ರಾಜ್ಯದ ಹಿತದಿಂದ ಜಂಟಿ ಸಮೀಕ್ಷಾ ಕಾರ್ಯಕ್ಕೆ ಒಪ್ಪಿಗೆ ಸೂಚಿಸಿ ರಾಜ್ಯಕ್ಕೆ ನ್ಯಾಯ ಒದಗಿಸುವಂತೆ ಅವರು ಆಗ್ರಹಿಸಿದರು.

ADVERTISEMENT

ರಾಜ್ಯೋತ್ಸವ: ಹೊಗೇನಕಲ್‌ನಲ್ಲಿ  ಸಂಘಟನೆವತಿಯಿಂದ ನವೆಂಬರ್ 5ರಂದು ಕನ್ನಡ ರಾಜ್ಯೋತ್ಸವವನ್ನು ಆಯೋಜಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ಅವರು ಪ್ರತಿಕ್ರಿಯಿಸಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ನೀಡಿರುವ 15 ಕೋಟಿ ರೂ. ಅನುದಾನ ಸಾಕಾಗುವುದಿಲ್ಲ. ಗಡಿ ಪ್ರದೇಶಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಮೊತ್ತವನ್ನು 200 ಕೋಟಿ ರೂಪಾಯಿಗೆ ವಿಸ್ತರಿಸಬೇಕು ಎಂದು ಅವರು ಮನವಿ ಮಾಡಿದರು. ರಾಮನಗರದಲ್ಲಿ ಸಂಘಟನೆಯ ಶಾಖೆಯ ಅಧ್ಯಕ್ಷರಾಗಿ ಗೋವಿಂದರಾಜು ಅವರನ್ನು ನೇಮಿಸಲಾಗಿದೆ ಇದರೊಂದಿಗೆ ಸಂಘಟನೆ ರಾಜ್ಯದ 23 ಜಿಲ್ಲೆಗಳಲ್ಲಿ ಶಾಖೆ ಹೊಂದಿದಂತಾಗಿದೆ ಎಂದು ಅವರು ತಿಳಿಸಿದರು.ಕರ್ನಾಟಕ ನವ ನಿರ್ಮಾಣ ಸೇನೆಯ ಪದಾಧಿಕಾರಿಗಳಾದ ಪ್ರಕಾಶ್‌ಮುರಳಿ, ಲಕ್ಷ್ಮೀಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.