ರಾಮನಗರ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಭಾಷೆ ಕಲಿಯುವುದು ಅವಶ್ಯಕ’ ಎಂದು ಇಂಗ್ಲಿಷ್ ಭಾಷೆಯ ಸಂವಹನ ತರಬೇತುದಾರರಾದ ಪ್ರೊ. ಗೀತಾ ಶ್ರೀನಿವಾಸನ್ ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ‘ಇಂಗ್ಲಿಷ್ ಡೆ, ಇಂಗ್ಲಿಷ್ ಎವರಿಡೆ’ ಎಂಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಎಲ್ಲಾ ಕ್ಷೇತ್ರಗಳಲ್ಲಿಯೂ ಇಂಗ್ಲಿಷ್ ತನ್ನ ಪ್ರಭುತ್ವ ಹೊಂದಿದೆ. ಇಂತಹ ಸಂದರ್ಭದಲ್ಲಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೀಳರಿಮೆಯನ್ನು ಬಿಟ್ಟು ಇಂಗ್ಲಿಷ್ ಭಾಷೆ ಕಲಿಯಬೇಕು. ಶಿಕ್ಷಕರು, ಉಪನ್ಯಾಸಕರು ವಿದ್ಯಾರ್ಥಿಗಳಿಗೆ ನೆರವಾಗಬೇಕು’ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ.ರಂಗಸ್ವಾಮಿ ಗೌಡ ಮಾತನಾಡಿ, ‘ವಿದ್ಯಾರ್ಥಿಗಳು ಇಂಗ್ಲಿಷ್ ಕಠಿಣ ಎಂಬ ಭ್ರಮೆಯನ್ನು ಮೊದಲು ಬಿಡಬೇಕು. ಇಲ್ಲಿ ತರಬೇತುದಾರರು ನೀಡುವ ಸಲಹೆ ಸೂಚನೆಗಳನ್ನು ಅನುಸರಿಸುವ ಮೂಲಕ ಇಂಗ್ಲಿಷ್ ಭಾಷೆಯನ್ನು ಸುಲಭವಾಗಿ ಕಲಿಯಬಹುದು’ ಎಂದು ಹೇಳಿದರು.
ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಡಿ. ಆನಂದ್ ಮಾತನಾಡಿ, ‘ಭಾಷಾ ಕೌಶಲಗಳಾದ ಆಲಿಸುವುದು, ಮಾತನಾಡುವುದು, ಓದುವುದು, ಬರೆಯುವುದು ಇವುಗಳ ಪರಿಣಾಮಕಾರಿ ಅಭ್ಯಾಸದಿಂದ ಇಂಗ್ಲಿಷ್ ಭಾಷೆಯ ಮೇಲೆ ಹಿಡಿತವನ್ನು ಸಾಧಿಸಬಹುದು’ ಎಂದು ಹೇಳಿದರು.
ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಡಾ.ಎಸ್. ಶೈಲಜಾ, ಸಹಾಯಕ ಪ್ರಾಧ್ಯಾಪಕಿ ಎಚ್.ಆರ್. ಅನುರಾಧಾ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.