ರಾಮನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನಡೆಸಿದೆ. ಈಗಲೂ ಚುನಾವಣೆ ನಡೆದರೆ ಜನರು ನಮ್ಮ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ 69ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಫೆಬ್ರುವರಿ 5 ರಂದು ರಾಜ್ಯಪಾಲರ ಜಂಟಿ ಅಧಿವೇಶನ ನಡೆಯಲಿದೆ. ಫೆ.16 ರಂದು ರಾಜ್ಯ ಬಜೆಟ್ ಅನ್ನು ಸಿದ್ದರಾಮಯ್ಯ ಮಂಡಿಸಲಿದ್ದಾರೆ. ಕಳೆದ ನಾಲ್ಕುವರೆ ವರ್ಷಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಜನಪ್ರಿಯ ಕಾರ್ಯಕ್ರಮಗಳಾದ ಅನ್ನಭಾಗ್ಯ, ಕ್ಷೀರಭಾಗ್ಯ, ಸಾಲ ಮನ್ನಾದಂತಹ ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಮುಂದಿನ ಬಜೆಟ್ ಸಹ ರಾಜ್ಯದ ಜನ ಸಾಮಾನ್ಯರಿಗೆ ಮತ್ತು ಅಭಿವೃದ್ಧಿಗೆ ಪೂರಕವಾಗಿರಲಿದೆ ಎಂದು ತಿಳಿಸಿದರು.
ರಾಮನಗರ ವಿಧಾನಸಭಾ ಕ್ಷೇತ್ರದ ನಾಯಕತ್ವದ ಬಗ್ಗೆ ಎಲ್ಲಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಸಂಸದ ಡಿ.ಕೆ.ಸುರೇಶ್ ವಿದೇಶ ಪ್ರವಾಸಕ್ಕೆ ತೆರಳುವ ಮುನ್ನ ನಾಯಕತ್ವದ ಬಗ್ಗೆ ಇರುವ ಗೊಂದಲಕ್ಕೆ ನಾಲ್ಕೈದು ದಿನಗಳಲ್ಲಿ ತೆರೆ ಎಳೆಯಲಾಗುವುದು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಯ್ಯದ್ ಜಿಯಾಉಲ್ಲಾ, ನಗರಸಭೆ ಅಧ್ಯಕ್ಷ ಪಿ. ರವಿಕುಮಾರ್, ಡಿಸಿಸಿ ಅಧ್ಯಕ್ಷ ಗಂಗಾಧರ್, ಉಪಾಧ್ಯಕ್ಷ ಎಲ್.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ರಾಮನಗರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿಎನ್ಆರ್ ವೆಂಕಟೇಶ್, ಎಂಇಐ ಅಧ್ಯಕ್ಷ ಕೆ.ಶೇಷಾದ್ರಿ, ಕೆಪಿಸಿಸಿ ಸದಸ್ಯ ಬ್ಯಾಟಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ನಗರಸಭೆ ಸದಸ್ಯರಾದ ಎಚ್.ಎಸ್. ಲೋಹಿತ್ಬಾಬು, ಮಂಗಳಮ್ಮ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಬಿ.ಸಿ. ಪಾರ್ವತಮ್ಮ, ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಎಂ. ಜಯಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾವ್ಯಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.