ಅಪಘಾತದಿಂದ ನಜ್ಜುಗುಜ್ಜಾಗಿರುವ ಕಾರು
– ಪಿಟಿಐ ಚಿತ್ರ
ಚನ್ನಪಟ್ಟಣ (ರಾಮನಗರ): ತಾಲ್ಲೂಕಿನ ತಿಟ್ಟಮಾರನಹಳ್ಳಿ ಬಳಿಯ ಬೆಂಗಳೂರು–ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಗುರುವಾರ ಸರಕು ಸಾಗಣೆ ಟೆಂಪೊ ಮತ್ತು ಕಾರು ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಟೆಂಪೊ ಚಾಲಕ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಾಲ್ಲೂಕಿನ ಮಂಗಾಡಹಳ್ಳಿಯ ಶಿವಪ್ರಕಾಶ್ (37), ಪುಟ್ಟಗೌರಮ್ಮ (72) ಹಾಗೂ ಶಿವರತ್ನ (50) ಮೃತರು. ಗಂಭೀರವಾಗಿ ಗಾಯಗೊಂಡಿರುವ ಕಾರಿನಲ್ಲಿದ ನಟರಾಜು ಮತ್ತು ಸುಮಾ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಟೆಂಪೊ ಚಾಲಕ ನಾಗೇಶ್ ಅವರ ಕಾಲು ಮುರಿದಿದ್ದು, ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಡ್ಯದಲ್ಲಿ ಸಂಬಂಧಿಕರೊಬ್ಬರ ಕಾರ್ಯಕ್ರಮಕ್ಕಾಗಿ ಶಿವಪ್ರಕಾಶ್ ಅವರು ತಮ್ಮ ಮಾರುತಿ–800 ಕಾರಿನಲ್ಲಿ ಕುಟುಂಬದೊಂದಿಗೆ ತೆರಳುತ್ತಿದ್ದರು. ತಿಟ್ಟಮಾರನಹಳ್ಳಿ ಸರ್ವೀಸ್ ರಸ್ತೆಯಲ್ಲಿ ಬೆಳಿಗ್ಗೆ 10ರ ಸುಮಾರಿಗೆ ಹೋಗುವಾಗ ಎದುರುಗಡೆಯಿಂದ ವೇಗವಾಗಿ ಬಂದ ಹೆಂಚುಗಳುನ್ನು ತುಂಬಿದ್ದ ಟೆಂಪೊ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದರು.
ಡಿಕ್ಕಿಯ ತೀವ್ರತೆಗೆ ಶಿವಪ್ರಕಾಶ್, ಪಟ್ಟಗೌರಮ್ಮ ಹಾಗೂ ಶಿವರತ್ನ ಸ್ಥಳದಲ್ಲೇ ಮೃತಪಟ್ಟರು. ಉಳಿದಿಬ್ಬರು ಗಂಭೀರವಾಗಿ ಗಾಯಗೊಂಡರೆ, ಟೆಂಪು ಚಾಲಕ ನಾಗೇಶ್ ಕಾಲು ಮುರಿಯಿತು. ವಿಷಯ ತಿಳಿದು ಸ್ಥಳಕ್ಕೆ ತೆರಳಿ, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಶವಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಕುರಿತು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.