ಚನ್ನಪಟ್ಟಣ: ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮ ಕೈಗೊಂಡಾಗ ಮಾತ್ರ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಸಾಧ್ಯ ಎಂದು ರಾಜ್ಯ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ. ಶಶಿಕಾಂತ್ ರಾವ್ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಯಲಿಯೂರು ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಗ್ರಾಮ ನೈರ್ಮಲ್ಯ, ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮುದಾಯದ ಆರೋಗ್ಯ ಸುಧಾರಣೆಯಾಗಬೇಕಾದರೆ ಗ್ರಾಮ ನೈರ್ಮಲ್ಯ ಮತ್ತು ಪರಿಸರ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಕಸ ವಿಲೇವಾರಿ, ಚರಂಡಿಗಳ ನಿರ್ವಹಣೆ, ಶೌಚಾಲಯ ಬಳಕೆ ಹಾಗೂ ಪರಿಸರ ಸ್ವಚ್ಛತೆ ನಿರ್ವಹಣೆ ಜೊತೆಗೆ ಶುದ್ಧ ಕುಡಿಯುವ ನೀರು, ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್.ಗಂಗಾಧರ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಮೂಢ ನಂಬಿಕೆಗಳಿಂದ ಕೆಲವರು ಸಮರ್ಪಕವಾಗಿ ಆಹಾರ ಸೇವನೆ ಮಾಡುತ್ತಿಲ್ಲ. ಉತ್ತಮ ಆರೋಗ್ಯ ಪಡೆಯಲು ಸಮತೋಲನ ಆಹಾರ ಅಗತ್ಯವಿದೆ. ಹದಿ-ಹರೆಯದ ವಯಸ್ಸಿನವರ ಮಾನಸಿಕ, ದೈಹಿಕ ಬೆಳವಣಿಗೆಗೆ ಪೌಷ್ಟಿಕ ಆಹಾರ ಸೇವನೆ ಬಹಳ ಮುಖ್ಯವಾಗಿದೆ. ಇದರಿಂದ ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ ಎಂದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎಸ್.ಬಿ.ಸಿ. ಘಟಕ, ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನ ಹಾಗೂ ಬೆಂಗಳೂರು ವಿವಿ ರಾಮನಗರ ಸ್ನಾತಕೋತ್ತರ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಎಸ್ಬಿಸಿಸಿ ಸಂಯೋಜಕ ಸುರೇಶ್ ಬಾಬು, ಗ್ರಾಮದ ಎಂಪಿಸಿಎಸ್ ಕಾರ್ಯದರ್ಶಿ ಬಸವರಾಜು, ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನದ ಜಿಲ್ಲಾ ಸಂಯೋಜಕ ಸುನೀಲ್ ಕುಮಾರ್, ಪ್ರಾಧ್ಯಾಪಕರಾದ ಆನಂದ್, ಅನಿತಾ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.