ADVERTISEMENT

ಜನರ ಅಹವಾಲು ಪರಿಹರಿಸಲು ಕ್ರಮ

ಕಡಸಿಕೊಪ್ಪ: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2022, 4:56 IST
Last Updated 18 ಸೆಪ್ಟೆಂಬರ್ 2022, 4:56 IST
ಕನಕಪುರ ತಾಲ್ಲೂಕಿನ ಕಡಸಿಕೊಪ್ಪ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮವನ್ನು ಶಾಸಕಿ ಅನಿತಾ ಕುಮಾರಸ್ವಾಮಿ ಉದ್ಘಾಟಿಸಿದರು
ಕನಕಪುರ ತಾಲ್ಲೂಕಿನ ಕಡಸಿಕೊಪ್ಪ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮವನ್ನು ಶಾಸಕಿ ಅನಿತಾ ಕುಮಾರಸ್ವಾಮಿ ಉದ್ಘಾಟಿಸಿದರು   

ಕನಕಪುರ: ಸರ್ಕಾರಿ ಯೋಜನೆಗಳ ಸೌಲಭ್ಯವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮತ್ತು ಗ್ರಾಮೀಣರ ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅಭಿಪ್ರಾಯ
ಪಟ್ಟರು.

ತಾಲ್ಲೂಕಿನ ಹಾರೋಹಳ್ಳಿ ಹೋಬಳಿಯ ಕಡಸಿಕೊಪ್ಪ ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಹಾಗೂ ಜನರ ಅಲೆದಾಟ ತಪ್ಪಿಸಲು ಸರ್ಕಾರದ ಆದೇಶದಂತೆ ಅಧಿಕಾರಿಗಳು ಇಡೀ ದಿನ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದರು.

ADVERTISEMENT

ಕಾರ್ಯಕ್ರಮದಲ್ಲಿ ಪಿಂಚಣಿ, ವಸತಿ, ಸ್ಮಶಾನ, ಪೌತಿ ಖಾತೆ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಪರಿಶೀಲನೆ ಹಾಗೂ ಪರಿಹಾರ ನೀಡುವುದು, ಅರ್ಹ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ಹಂಚಿಕೆ, ಪೋಡಿ ಪ್ರಕರಣ ಇತ್ಯರ್ಥ, ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದ ಅಡೆತಡೆ ನಿವಾರಣೆ ಮಾಡಲಾಗುವುದು ಎಂದು ತಿಳಿಸಿದರು.

ಕಾಲಮಿತಿಯಲ್ಲಿ ಅರ್ಜಿಗಳನ್ನು ಪರಿಹರಿಸಲು ಅಧಿಕಾರಿಗಳು ಕ್ರಮವಹಿಸಲಿದ್ದಾರೆ. ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಮಾತನಾಡಿ, ಜನರ ಸಮಸ್ಯೆ ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಾರ್ವಜನಿಕರು ವೈಯಕ್ತಿಕ ಮತ್ತು ಗ್ರಾಮದ ಸಮಸ್ಯೆ ಕುರಿತು ಲಿಖಿತವಾಗಿ ಅರ್ಜಿ ಸಲ್ಲಿಸಿದರೆ ಪರಿಹರಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.

ಬಹುತೇಕ ಸಮಸ್ಯೆಗಳಿಗೆ ಇಲ್ಲಿಯೇಪರಿಹಾರ ಸಿಗಲಿದೆ. ರಸ್ತೆ ಸಮಸ್ಯೆ, ಸ್ಮಶಾನ ಗುರುತಿಸುವಿಕೆ , ಕಂದಾಯ ಇಲಾಖೆ ಸಮಸ್ಯೆ ಸೇರಿದಂತೆ ಯಾವುದೇ ಸಮಸ್ಯೆ ಇದ್ದರೆ ಪರಿಹರಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ಶಿಬಿರ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಅರಿವು ಮೂಡಿಸಲಾಯಿತು. ಕೋವಿಡ್‌ ಲಸಿಕಾ ಅಭಿಯಾನ, ಪೋಷಣ ಮಾಸಾಚರಣೆ ಅಭಿಯಾನ, ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯ ಕುರಿತು ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿ.ಆರ್‌. ವಿಶ್ವನಾಥ್, ಎ.ಡಿ.ಎಲ್.ಆರ್ ಸಂತೋಷ್, ತಾಲ್ಲೂಕು ಆರೋಗ್ಯಾಧಿಕಾರಿ, ಕೊಳ್ಳಿಗಾನಹಳ್ಳಿ ಪಿಡಿಒ, ಸ್ಥಳೀಯ ಮುಖಂಡರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.