ADVERTISEMENT

ಅರ್ಹರಿಗೆ ಯೋಜನೆ ತಲುಪಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 2:46 IST
Last Updated 17 ಸೆಪ್ಟೆಂಬರ್ 2021, 2:46 IST
ಚನ್ನಪಟ್ಟಣದಲ್ಲಿ ಸರ್ಕಾರಿ ನೌಕರರ ಸಂಘದ ಮಳಿಗೆಗಳನ್ನು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಉದ್ಘಾಟಿಸಿದರು. ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಇದ್ದರು
ಚನ್ನಪಟ್ಟಣದಲ್ಲಿ ಸರ್ಕಾರಿ ನೌಕರರ ಸಂಘದ ಮಳಿಗೆಗಳನ್ನು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಉದ್ಘಾಟಿಸಿದರು. ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಇದ್ದರು   

ಚನ್ನಪಟ್ಟಣ: ‘ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಕೆಲಸವನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ಕೈಜೋಡಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸರ್ಕಾರಿ ನೌಕರರಿಗೆ ಕಿವಿಮಾತು ಹೇಳಿದರು.

ಪಟ್ಟಣದಲ್ಲಿ ಗುರುವಾರ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಿರ್ಮಾಣವಾಗಿರುವ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಅರ್ಹರಿಗೆ ತಲುಪುವಂತೆ ನೋಡಿಕೊಳ್ಳುವುದು ಸರ್ಕಾರಿ ನೌಕರರ ಜವಾಬ್ದಾರಿಯಾಗಿದೆ. ಸರ್ಕಾರಿ ನೌಕರರು ತಮ್ಮ ಕ್ಷೇಮಾಭಿವೃದ್ಧಿಯ ಬಗ್ಗೆ ಯೋಚಿಸದೆ ರಾಜ್ಯದ ಜನರ ಕ್ಷೇಮಾಭಿವೃದ್ಧಿಯ ಕುರಿತು ಯೋಚಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು ಸದಾ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುತ್ತಾರೆ. ಕೇಂದ್ರ ಸರ್ಕಾರಿ ನೌಕರರಿಗಿಂತ ರಾಜ್ಯ ಸರ್ಕಾರಿ ನೌಕರರು ಹೆಚ್ಚು ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಆದರೆ ಇಬ್ಬರ ವೇತನ ಶ್ರೇಣಿಯಲ್ಲಿ ಸಾಕಷ್ಟು ವ್ಯತ್ಯಾಸವಿದೆ. ರಾಜ್ಯ ಸರ್ಕಾರ ಇದನ್ನು ಸರಿಪಡಿಸಬೇಕು. ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ನೀಡಬೇಕು’ ಎಂದು ಆಗ್ರಹಿಸಿದರು.

ತಹಶೀಲ್ದಾರ್ ನಾಗೇಶ್, ತಾ.ಪಂ. ಇಒ ಚಂದ್ರು, ಪೌರಾಯುಕ್ತ ಶಿವನಾಂಕರೀಗೌಡ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬೈರಲಿಂಗಯ್ಯ, ಉಪಾಧ್ಯಕ್ಷ ಶಿವಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್, ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಮನಸ್ಸು ತಡೆಯಲಿಲ್ಲ ಅದಕ್ಕೆ ಬಂದೆ: ‘ಸರ್ಕಾರಿ ನೌಕರರ ಸಂಘದ ಕಾರ್ಯಕ್ರಮಕ್ಕೆ ಯಾವುದೇ ಜನಪ್ರತಿನಿಧಿಗಳು ಬಂದಿಲ್ಲ. ಯಾರೂ ಬರುವುದಿಲ್ಲ ಎನ್ನುವುದು ನನಗೆ ಗೊತ್ತಿತ್ತು. ನನ್ನ ಮನಸ್ಸು ತಡೆಯಲಿಲ್ಲ. ಹಾಗಾಗಿ ಬಂದಿದ್ದೇನೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳುವ ಮೂಲಕ ಆಶ್ಚರ್ಯ ಮೂಡಿಸಿದರು.

‘ಎರಡೂವರೆ ವರ್ಷದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ್ದು ಕಡಿಮೆ. ಇಲ್ಲಿಗೆ ಬರುವುದು ಬೇಡ ಎನ್ನಿಸಿದರೂ ಮನಸ್ಸಿನಲ್ಲಿ ತಳಮಳವಾಗುತ್ತಿತ್ತು. ಆಮೇಲೆ ನನಗೆ ನಾನೆ ಸಮಾಧಾನ ಮಾಡಿಕೊಂಡು ಕಾರ್ಯಕ್ರಮಕ್ಕೆ ಬಂದೆ. ವೇದಿಕೆಗೆ ಬಂದಾಗ ನನ್ನ ಮುಖ ಕೆಂಪಾಯಿತು. ಆಮೇಲೆ ನೀರು ಕುಡಿದು ಸಮಾಧಾನ ಮಾಡಿಕೊಂಡೆ’ ಎಂದೇಳುವ ಮೂಲಕ ತನ್ನ ಸೋಲಿನ ನೋವನ್ನು ಪರೋಕ್ಷವಾಗಿ ಯೋಗೇಶ್ವರ್ ತೋಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.